ವಿಜಯಪುರ: ಶಾಸಕ ಎಂ.ಸಿ. ಮನಗೂಳಿ ಅವರ ನಿಧನಕ್ಕೆ ಕಾಶಿ ಶ್ರೀ ಗಳು ಸೇರಿದಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಸಿ.ಸಿ.ಪಾಟೀಲ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.
'ಗುರುಲಿಂಗಜಂಗಮ ಪ್ರೇಮಿಗಳೂ, ಆದರ್ಶ ರಾಜಕಾರಣಿಗಳೂ ಆಗಿದ್ದ ಮನಗೂಳಿ ಅವರ ಅಗಲುವಿಕೆಯಿಂದ ಒಬ್ಬ ಆದರ್ಶ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಅಗಲಿಕೆಯಿಂದ ಉಂಟಾದ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಶ್ರೀ ಕಾಶಿ ವಿಶ್ವನಾಥ ಅನ್ನಪೂರ್ಣೆಯರು, ಶ್ರೀ ಜಗದ್ಗುರು ವಿಶ್ವಾರಾಧ್ಯರು ಅನುಗ್ರಹಿಸಲಿ' ಎಂದು ಕಾಶಿ ಜಗದ್ಗುರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
'ಎರಡು ಬಾರಿ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದ ಮನಗೂಳಿ ಅವರು ಕೃಷಿ ಕುಟುಂಬದಿಂದ ಬಂದಿದ್ದು, ಜಿಲ್ಲೆಯ ಕೃಷಿ ಹಾಗೂ ನೀರಾವರಿ ಕ್ಷೇತ್ರದ ಅಭಿವೃದ್ಧಿಗಾಗಿ ಹೋರಾಟ ನಡೆಸುವ ಮೂಲಕ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಸರಳ, ಸಜ್ಜನ ರಾಜಕಾರಣಿಯಾಗಿದ್ದ ಮನಗೂಳಿ ಅವರನ್ನು ಸದನದ ಒಳಗೂ ಹಾಗೂ ಹೊರಗಡೆಯೂ ಮಾವ ಎಂದೇ ಸಂಭೋದಿಸುತ್ತಿರುವುದಾಗಿ ತಿಳಿಸಿದ್ದಾರೆ.
ಅವರೊಂದಿಗೆ ತಾವು ಅವಿನಾಭಾವ ಸಂಬಂಧ ಹೊಂದಿದ್ದು, ಅವರ ನಿಧನದಿಂದ ದಿಗ್ಭ್ರಾಂತ ನಾಗಿದ್ದೇನೆ. ಅವರ ನಿಧನದಿಂದ ರಾಜ್ಯವು ಓರ್ವ ಹಿರಿಯ, ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.