
ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗಟ್ಟಿರುವ ಕ್ರಮ ಖಂಡನೀಯ. ತಕ್ಷಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸಿದೆ.
27 ಜನ ಹೋರಾಟಗಾರರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸೋಮವಾರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಗೆ ಮನವಿ ಸಲ್ಲಿಸಿದರು.
ಯಾವುದೇ ಕಾರಣಕ್ಕೂ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆಯಾಗುವವರೆಗೂ ಹೋರಾಟ ನಿಲ್ಲಲ್ಲ. ಹೋರಾಟದ ಸ್ವರೂಪ ಬದಲಾಗಲಿದೆ. ಹೋರಾಟ ನಿರಂತರವಾಗಲಿದೆ. ಮುಖ್ಯಮಂತ್ರಿಗಳು ವಿಜಯಪುರಕ್ಕೆ ಬಂದಾಗ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಿಸಬೇಕು ಮತ್ತು ಹೋರಾಟಗಾರರ ಮೇಲಿನ ಎಲ್ಲಾ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪಕ್ಷಾತೀತವಾಗಿ, ಜಾತ್ಯತೀತವಾಗಿ ಎರಲ್ಲರನ್ನೂ ಒಳಗೊಂಡ ಈ ಹೋರಾಟವು ಯಾರ ವಿರುದ್ದವೂ ಅಲ್ಲ, ಯಾರ ಪರವೂ ಅಲ್ಲ. ಜಿಲ್ಲೆಯ ಪರವಾದ ಹೋರಾಟವಾಗಿದೆ ಎಂದು ಹೇಳಿದರು.
ಕಿತ್ತು ಹಾಕಿರುವ ಪೆಂಡಾಲ್ ಅನ್ನು ಪುನಃ ಅಂಬೇಡ್ಕರ್ ವೃತ್ತದಲ್ಲಿ ಹಾಕಿ ಹೋರಾಟ ಮುಂದೆವರೆಸಲು ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ದುರ್ಗಪ್ಪ ಬೂದಿಹಾಳ, ವಿಕ್ರಮ ವಾಘಮೋರೆ, ಸೀನು ಹಿಪ್ಪರಗಿ, ರಾಕೇಶ ಇಂಗಳಗಿ, ಪ್ರವೀಣ ಕನಸೆ, ಸುರೇಂದ್ರ, ನಬಿರಸೂಲ ಹುಣಶ್ಯಾಳ, ಹಮೀದ್ ಇನಾಮದಾರ, ಸಿದ್ದರಾಯ ಬಿರಾದಾರ, ಅಣ್ಣಾ ಪೂಜಾರಿ, ಗಣಪತಿ ರಾಠೋಡ, ಮಲ್ಲಿಕಾರ್ಜುನ ಬಿರಾದಾರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.