ಸಚಿವ ರಾಮಲಿಂಗರೆಡ್ಡಿ
ವಿಜಯಪುರ: ಹೊಸ ಬಸ್ಗಳ ಎರಡು ಸಾವಿರ ಖರೀದಿಗೆ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಈ ಪೈಕಿ ಕೆಕೆಆರ್ಟಿಸಿಗೆ 400 ಬಸ್ಗಳನ್ನು ಹಾಗೂ ಕೆಎಸ್ಆರ್ಟಿಸಿಗೆ 900, ವಾಯವ್ಯ ಕರ್ನಾಟಕ ಸಾರಿಗೆಗೆ 700 ಬಸ್ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.
ನಗರದ ದರ್ಬಾರ್ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 102 ನೂತನ ನಗರ ಸಾರಿಗೆ ಬಸ್ಗಳನ್ನು ಲೋಕಾರ್ಪಣೆಗೊಳಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
225 ವಿದ್ಯುತ್ ಚಾಲಿತ್ ಬಸ್ಗಳನ್ನು ಖರೀದಿಸಲಾಗುತ್ತಿದ್ದು, ಈ ಪೈಕಿ ಕಲಬುರ್ಗಿಗೆ 100, ವಿಜಯಪುರಕ್ಕೆ 75 ಹಾಗೂ ಬಳ್ಳಾರಿಗೆ 50 ಬಸ್ಗಳನ್ನು ಹಂಚಿಕೆ ಮಾಡಲಾಗುವುದು ಎಂದರು.
ಮುಂದಿನ ಎರಡು ತಿಂಗಳಲ್ಲಿ 20 ನಾನ್ ಎಸಿ ಸ್ಲೀಪರ್, 20 ಎಸಿ ಸ್ಲೀಪರ್ ಹಾಗೂ 16 ಎ.ಸಿ. ಸೀಟರ್ ಸೇರಿದಂತೆ ಒಟ್ಟು 56 ಹೊಸ ವಾಹನಗಳ ಖರೀದಿಗೆ ಆದೇಶ ಹೊರಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹಂತ-ಹಂತವಾಗಿ ಬಸ್ಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಇದರಿಂದ ನಗರದಿಂದ ನಗರಗಳಿಗೆ ಪ್ರಯಾಣಿಸಲು ಅನುಕೂಲವಾಗಲಿದೆ ಎಂದು ಹೇಳಿದರು.
ಕೆಕೆಆರ್ಟಿಸಿ 400 ಬಸ್ಗಳ ಖರೀದಿ ಪ್ರಕ್ರಿಯೆ ಜಾರಿಯಲ್ಲಿದ್ದು, ಮುಂದಿನ ಎರಡ್ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.
ರಾಜ್ಯದಲ್ಲಿ ನಗರಗಳ ವ್ಯಾಪ್ತಿ ವೃದ್ಧಿಸುತ್ತಿದೆ. ಬೆಳೆಯುತ್ತಿರುವ ನಗರಗಳಲ್ಲಿನ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಸುಸಜ್ಜಿತ ಮತ್ತು ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚುವರಿ 112 ಬಸ್ಗಳನ್ನು ಹಂಚಿಕೆ ಮಾಡಲಾಗಿದೆ. ಪ್ರಸ್ತುತವಾಗಿ ನೂತನ 102 ಹೊಸ ನಗರ ಸಾರಿಗೆ ಬಸ್ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಲ್ಲಿ 27 ಬಸ್ಗಳು ವಿಜಯಪುರ ವಿಭಾಗಕ್ಕೆ ಹಂಚಿಕೆಯಾಗಿದೆ ಎಂದು ಹೇಳಿದರು.
ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ಒಂದು ಸಾವಿರ ಹಾಗೂ ನೇರ ನೇಮಕಾತಿಯಲ್ಲಿ 9000 ಸೇರಿದಂತೆ 10 ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ವಿಜಯಪುರ ಜಿಲ್ಲೆಯು ಆಡಳಿತವಾಗಿ ಬೆಳಗಾವಿ ವಿಭಾಗಕ್ಕೆ ಸೇರಿದ್ದರೂ ಸಹ ವಿಜಯಪುರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸೇರ್ಪಡೆಯಾಗಿದೆ. ಇದರಿಂದ ವಿಜಯಪುರ ಜಿಲ್ಲೆಗೆ ಸಾಮಾನ್ಯ ಅನುದಾನದಲ್ಲಿ ಹೆಚ್ಚಿನ ಆದ್ಯತೆ ನೀಡುವಂತೆ ಸಚಿವ ರಾಮಲಿಂಗರೆಡ್ಡಿ ಅವರನ್ನು ಕೋರಿದರು.
ಜಿಲ್ಲೆಯ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಸಾಮಾನ್ಯ ಅನುದಾನ ಒದಗಿಸಿ ಅಭಿವೃದ್ದಿ ಕೈ ಜೋಡಿಸುವಂತೆ ಮನವಿ ಮಾಡಿದರು.
ರಾಜ್ಯದಲ್ಲಿನ ಬಸ್ಗಳಲ್ಲಿ ಮಹಿಳೆಯರಿಗೆ ಆಸನ ಮೀಸಲಿಡುವ ಮಾದರಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಸಾರಿಗೆ ಬಸ್ಗಳಲ್ಲಿ ವಿದ್ಯಾರ್ಥಿಗಳಿಗೆ ಆಸನ ಮೀಸಲಿಡಲು ಕ್ರಮ ವಹಿಸುವಂತೆ ಅವರು ಸಚಿವರ ಗಮನಕ್ಕೆ ತಂದರು.
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಠ್ಠಲ ಕಟಕಧೋಂಡ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಂ.ವೈ.ಪಾಟೀಲ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಾ ಬಿ., ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.