
ವಿಜಯಪುರ: ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ತಿಂಗಳು ಸತತವಾಗಿ 21 ದಿನಗಳವರೆಗೂ ಕೆಲಸ ಕೊಡಬೇಕೆಂದು ಹಾಗೂ ಕೂಲಿ ಕಾರ್ಮಿಕರ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ್ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಕೃಷಿ ಕೂಲಿ ಕಾರ್ಮಿಕ ಸಂಘದ ಮುಖಂಡ ರಮೇಶ್ ತಳವಾರ ಮಾತನಾಡಿ, ಹೋರಾಟ ಮಾಡಿದಾಗ ಒಂದು ವಾರದ ಮಟ್ಟಿಗೆ ಕೆಲಸ ಕೊಟ್ಟು ಅಧಿಕಾರಿಗಳು ಕೈತೊಳೆದುಕೊಳ್ಳುತ್ತಿದ್ದಾರೆ. ಕೆಲಸಕ್ಕಾಗಿ ಕೂಲಿ ಕಾರ್ಮಿಕರು ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯಿತಿಗಳಿಗೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅಧಿಕಾರಿಗಳು ಕೃಷಿ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಕೆಲಸ ನೀಡಬೇಕೆಂದು ಆಗ್ರಹಿಸಿದರು.
ರಾಜ್ಯ ಜಂಟಿ ಕಾರ್ಯದರ್ಶಿ ದಾವಲಸಾಬ್ ನಧಾಫ ಮಾತನಾಡಿದರು.
ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಅಣ್ಣಾರಾಯ ಇಳಿಗೇರ, ಜಿಲ್ಲಾ ವಾಲ್ಮೀಕಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಳಸಿದ್ದ ನಾಯ್ಕೋಡಿ, ಹುಲುಗಪ್ಪ ಚಲವಾದಿ, ಭೀಮರಾಯ ಪೂಜಾರಿ, ಸುರೇಖಾ ರಜಪೂತ್, ಶಿವುಬಾಯಿ ಗರಸಂಗಿ, ಭೀಮಸಿ ಪವಾರ, ಬಾಬು ರಾಠೋಡ, ಶಾಂತಪ್ಪ ಹೊಸಮನಿ, ಲಾಲಸಾಬ ಚಳಗಿ, ಬಸವರಾಜ ಇಟಗಿ, ಸಲೀಂ ವಕರಾಣಿ, ಸಿದ್ದು ಸಿಂದಗಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.