ವಿಜಯಪುರ: ‘ಪ್ರತಿಯೊಬ್ಬರಲ್ಲಿಯೂ ಕಾನೂನಿನ ಜ್ಞಾನ ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಸಾಕ್ಷರತಾ ರಥದ ಮೂಲಕ ಜನರಲ್ಲಿ ಕಾನೂನಿನ ಅರಿವು ಮೂಡಿಸಲಾಗುತ್ತಿದೆ’ ಎಂದು 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಜೋಶಿ ವೆಂಕಟೇಶ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಕಾನೂನು ಸಾಕ್ಷರತಾ ರಥ–ಸಂಚಾರಿ ನ್ಯಾಯಾಲಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಕೆಲವರು ಕಾನೂನನ್ನು ತಿಳಿದು ತಪ್ಪು ಮಾಡುತ್ತಾರೆ. ಕೆಲವರು ತಿಳಿಯದೇ ತಪ್ಪುಗಳನ್ನು ಮಾಡುತ್ತಾರೆ. ಹಾಗಾಗಿ ಜನರಲ್ಲಿ ಕಾನೂನಿನ ಜಾಗೃತಿ ಮೂಡಿಸುವುದು ಹಾಗೂ ಎಲ್ಲರಿಗೂ ಸಮಾನ ನ್ಯಾಯ ಒದಗಿಸುವುದು ನಮ್ಮ ಸಂವಿಧಾನದ ಮೂಲ ಉದ್ದೇಶವಾಗಿದೆ’ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವೀಂದ್ರ ಕಾರಬಾರಿ ಮಾತನಾಡಿ, ‘ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಜೊತೆಗೆ ಕಾನೂನಿನ ಮಾಹಿತಿ ನೀಡಿ, ಜನರು ಉತ್ತಮ ಜೀವನ ನಡೆಸುವಂತೆ ಮಾಡುವುದೇ ಸಾಕ್ಷರತಾ ರಥ ಸಪ್ತಾಹ ಮತ್ತು ಜನತಾ ನ್ಯಾಯಾಲಯದ ಮುಖ್ಯ ಉದ್ದೇಶವಾಗಿದೆ’ ಎಂದು ತಿಳಿಸಿದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಎಚ್.ಖಾಸನೀಸ, ಪ್ರಧಾನ ಕೌಟುಂಬಕ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಕುಲಕರ್ಣಿ, 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಜಿ.ಡಿ.ಮಹಾವರಕರ, 1ನೇ ಹೆಚ್ಚುವರಿ ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಶೈಲಾ ಬಿ.ಎಂ., 3ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ರಾಘವೇಂದ್ರಗೌಡ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ತಾಲ್ಲೂಕು ಪಂಚಾಯಿತಿಯ ಬಿ.ಆರ್.ಬಿರಾದಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.