ADVERTISEMENT

ಆಯೋಗದ ನಿರ್ದೇಶನದಂತೆ ಕಾರ್ಯ ನಿರ್ವಹಿಸಿ: ಡಾ.ರತನ್ ಕನ್ವರ್ ಎಚ್. ಗಂಧವಿಚರಣ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 13:23 IST
Last Updated 23 ಏಪ್ರಿಲ್ 2024, 13:23 IST
ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಚುನಾವಣಾ ವೀಕ್ಷಕರಾದ ಡಾ.ರತನ್ ಕನ್ವರ್ ಎಚ್. ಗಂಧವಿಚರಣ  ಮಾತನಾಡಿದರು 
ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಚುನಾವಣಾ ವೀಕ್ಷಕರಾದ ಡಾ.ರತನ್ ಕನ್ವರ್ ಎಚ್. ಗಂಧವಿಚರಣ  ಮಾತನಾಡಿದರು    

ವಿಜಯಪುರ: ಭಾರತೀಯ ಚುನಾವಣೆ ಆಯೋಗದ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಿ ಲೋಕಸಭೆ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ವಿಜಯಪುರ ಮೀಸಲು ಕ್ಷೇತ್ರದ ಚುನಾವಣಾ ವೀಕ್ಷಕರಾದ ಡಾ.ರತನ್ ಕನ್ವರ್ ಎಚ್. ಗಂಧವಿಚರಣ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಮತದಾರ ಮುಕ್ತವಾಗಿ ಮತದಾನ ಮಾಡಲು ಶಾಂತಿಯುತ, ಸುವ್ಯವಸ್ಥಿತ ವಾತಾವರಣ ರೂಪಿಸಬೇಕು. ಮತಗಟ್ಟೆಗಳಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮಸ್ಯೆಗಳು ಕಂಡು ಬಂದರೆ ಆದ್ಯತೆಯ ಮೇರೆಗೆ ನಿವಾರಿಸಬೇಕು. ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು ಎಂದರು.

ADVERTISEMENT

ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಪ್ರದೇಶಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಎಂದರು.

ಪೊಲೀಸ್ ವಿಕ್ಷಣಾಧಿಕಾರಿ ಎಂ.ಅರ್ಶಿ ಮಾತನಾಡಿ, ‘ಚುನಾವಣೆಗೆ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಕಾರ್ಯಕ್ಷಮತೆಯಿಂದ ಕರ್ತವ್ಯ ನಿರ್ವಹಿಸಬೇಕು. ಮತದಾನಕ್ಕೆ ಪ್ರಜೆಗಳ ಸಹಕಾರ ಅತಿ ಅವಶ್ಯಕವಿದ್ದು, ಅಧಿಕಾರಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಕ್ರಮ ವಹಿಸಬೇಕು’ ಎಂದರು.

ಜಿಲ್ಲಾ ಚುನಾವಣಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ‘ಜಿಲ್ಲೆಯಲ್ಲಿ ಒಟ್ಟು 2085 ಮತಗಟ್ಟೆಗಳಿದ್ದು, 9,87,974 ಪುರುಷ, 9,57,906 ಮಹಿಳಾ, 210 ಇತರ ಮತದಾರರು ಸೇರಿ ಒಟ್ಟು 19,46,090 ಮತದಾರರು ಇದ್ದಾರೆ. ಇದರಲ್ಲಿ 21,803 ಅಂಗವಿಕಲ ಮತದಾರರು, 44,169 ಯುವ ಮತದಾರರು, 17,157 ಹಿರಿಯ (85 ವರ್ಷ ಮೇಲ್ಪಟ್ಟ) ಮತದಾರರು, 1,882 ಸೇವಾ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.

ಇಲ್ಲಿಯವರೆಗೆ ವಶಪಡಿಸಿಕೊಂಡ ಅಕ್ರಮ ಹಣ, ಮದ್ಯ , ಗಾಂಜಾ ಮಾದಕ ವಸ್ತುಗಳ ಒಟ್ಟು ಮೌಲ್ಯ ₹ 3.45 ಕೋಟಿ  ಆಗುತ್ತದೆ. 118 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಮಾತನಾಡಿ, ಜಿಲ್ಲೆಯಲ್ಲಿ ಚುನಾವಣೆ ಅಕ್ರಮಗಳನ್ನು ತಡೆಗಟ್ಟಲು ಒಟ್ಟು 29 ಚೆಕ್‌ ಪೋಸ್ಟ್ ಗಳನ್ನೂ ಸ್ಥಾಪಿಸಲಾಗಿದೆ. ಅದರಲ್ಲಿ 11 ಅಂತರರಾಜ್ಯ, 13 ಅಂತರ್ ಜಿಲ್ಲಾ ಹಾಗೂ 5 ಸ್ಥಳೀಯ ನಾಕಗಳ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 2363 ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಪೈಕಿ 2274 ಶಸ್ತ್ರಾಸ್ತ್ರಗಳ ಠೇವಣಿ ಪಡೆಯಲಾಗಿದೆ. ಬ್ಯಾಂಕ್ ಹಾಗೂ ಜೀವ ಬೆದರಿಕೆ ಪ್ರಕರಣ ಸೇರಿ ಒಟ್ಟು 54 ಶಸ್ತ್ರಾಸ್ತ್ರಗಳಿಗೆ ವಿನಾಯತಿ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ರಿಷಿ ಆನಂದ ಮಾತನಾಡಿ, ‘ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಇಲ್ಲಿಯವರೆಗೆ 372 ವಿಭಿನ್ನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. 40 ಮಹಿಳಾ ಮತಗಟ್ಟೆ ಸ್ಥಾಪಿಸಲಾಗುವುದು, 8 ಮತಗಟ್ಟೆಗಳನ್ನು ವಿಶೇಷ ಮಾದರಿ ರೀತಿಯಲ್ಲಿ ಸ್ಥಾಪಿಸಲಾಗುವುದು. ಸೇವಾ ಮತದಾರರಿಗೆ 8 ಮತಗಟ್ಟೆಗಳನ್ನು, ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.

ಸಭೆಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.