ADVERTISEMENT

ಮಲ್ಲಮ್ಮ ವ್ಯಕ್ತಿತ್ವ ಮಹಿಳೆಯರಿಗೆ ಆದರ್ಶಪ್ರಾಯ: ವಿಜುಗೌಡ ಪಾಟೀಲ್

​ಪ್ರಜಾವಾಣಿ ವಾರ್ತೆ
Published 10 ಮೇ 2022, 14:24 IST
Last Updated 10 ಮೇ 2022, 14:24 IST
ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ  ಮಂಗಳವಾರ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಗಣ್ಯರು ಮಲ್ಲಮ್ಮ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು
ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ  ಮಂಗಳವಾರ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಗಣ್ಯರು ಮಲ್ಲಮ್ಮ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು   

ವಿಜಯಪುರ: ಪ್ರತಿಯೊಬ್ಬ ಮಹಿಳೆಗೂ ಆದರ್ಶಪ್ರಾಯವಾದ ವ್ಯಕ್ತಿತ್ವ ಹೊಂದಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಚರಿತ್ರೆಯನ್ನು ಪ್ರತಿಯೊಬ್ಬ ಮಹಿಳೆಯು ಅರಿತುಕೊಳ್ಳಬೇಕು ಎಂದು ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ್ ಹೇಳಿದರು.

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಮಂಗಳವಾರ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೇಮರೆಡ್ಡಿ ಮಲ್ಲಮ್ಮನವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ಅದರಲ್ಲೂ ವಿಶೇಷವಾಗಿ ಮಹಿಳೆಯರು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು. ಅವರು ಪ್ರತಿಪಾದಿಸಿದ ಭಕ್ತಿಮಾರ್ಗದ ದಾರಿಯಲ್ಲಿ ಎಲ್ಲರೂ ನಡೆಯಬೇಕು ಎಂದು ತಿಳಿಸಿದರು.

ADVERTISEMENT

ಹೇಮರೆಡ್ಡಿ ಮಲ್ಲಮ್ಮನ ಆಶೀರ್ವಾದದಿಂದಲೇ ಇಂದು ರೆಡ್ಡಿ ಸಮಾಜ ಆರ್ಥಿಕ ಪರಿಸ್ಥಿತಿಯೂ ಬಹಳ ಸಮೃದ್ಧಿಯಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಏನೇ ಕಷ್ಟ ಬಂದರೂ ಅದಕ್ಕೆ ಹೆದರದೇ, ಪರರಿಗೆ ಒಳಿತು ಮಾಡುವ ಗುಣ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರಲ್ಲಿತ್ತು. ಅಂತಹ ಸದ್ಗುಣಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಕಾಯಕ ಮತ್ತು ದಾಸೋಹಕ್ಕೆ ವಿಶೇಷ ಒತ್ತು ನೀಡಿದ್ದರು. ಭಕ್ತಿಮಾರ್ಗದ ದಾರಿಯಲ್ಲಿ ಎಲ್ಲರೂ ನಡೆಯಬೇಕು ಎಂಬುದನ್ನು ಅವರು ತೋರಿಸಿಕೊಟ್ಟರು ಎಂದರು.

ವಿಶೇಷ ಉಪನ್ಯಾಸ ನೀಡಿದ ಶಿಕ್ಷಕ ಮಾಧವ ಗುಡಿ, ಎಲ್ಲ ಸ್ತ್ರೀಯರಿಗೂ ಮಾದರಿಯಾದ ವ್ಯಕ್ತಿತ್ವವನ್ನು ಮಲ್ಲಮ್ಮ ಹೊಂದಿದ್ದು, ಕಷ್ಟ ಕಾರ್ಪಣ್ಯವನ್ನು ಸಹಿಸುವ ಸಹನೆ ಅವರಲ್ಲಿತ್ತು. ಸಹನೆ ಮತ್ತು ತಾಳ್ಮೆಗೆ ಇನ್ನೊಂದು ಹೆಸರೆಂಬಂತೆ ಬದುಕಿದ್ದರು ಎಂದು ಹೇಳಿದರು.

ಮಲ್ಲಮ್ಮಳ ವ್ಯಕ್ತಿತ್ವವು ಆದರ್ಶ ಪ್ರಾಯವಾಗಿದ್ದು, ಅವರು ನೈತಿಕತೆ, ಧಾರ್ಮಿಕ, ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ್ದಾರೆ. ಅವರ ಜೀವನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ವಿಜಯಕುಮಾರ್ ಅಜೂರ, ಡಿವೈಎಸ್ಪಿ ಲಕ್ಷ್ಮೀನಾರಾಯಣ, ಹೇಮರೆಡ್ಡಿ ಸಂಸ್ಥೆಯ ಅಧ್ಯಕ್ಷ ಕೆ.ಬಿ.ಪಾಟೀಲ್, ಹೇಮರೆಡ್ಡಿ ಮಲ್ಲಮ್ಮ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಡಾ.ಕರಿಗೌಡರ, ರಮೇಶ ಬಿದನೂರು, ಪಾಂಡು ಸಾಹುಕಾರ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರೇಮಾನಂದ ಬಿರಾದಾರ, ರಾಜಕುಮಾರ ಹಡಲಗೇರಿ, ನಾಡಗೌಡ, ಬಾಲರಾಜ್ ರೆಡ್ಡಿ, ನವೀನ್ ರೆಡ್ಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.