ವಿಜಯಪುರ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರರಿಗೆ ನೀಡಿದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ-2021-22ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಸಭೆಯಲ್ಲಿ ಅವರು ಮಾತನಾಡಿದರು.
ಈ ಯೋಜನೆಯಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಮೀನು ಉತ್ಪಾದನೆಯಲ್ಲಿ ಗಣನೀಯವಾಗಿ ಏರಿಕೆ ಕಂಡು ಬರುತ್ತದೆ ಎಂದು ಹೇಳಿದರು.
ಈ ಯೋಜನೆಯು ಇನ್ನೂ 3 ವರ್ಷಗಳು ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೀನು ಕೃಷಿಕರು, ಮೀನುಗಾರರು, ಮತ್ಸ್ಯೊದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಮೀನುಗಾರಿಕೆ ಸಹಾಯವಾಣಿಯನ್ನು ಜಿಲ್ಲಾಧಿಕಾರಿ ಬಿಡುಗಡೆಗೊಳಿಸಿದರು.ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮಾನದಂಡವನ್ನು ಅನುಸರಿಸಿ ಅರ್ಜಿಗಳನ್ನು ಕರೆಯಲಾಗಿದ್ದು, ಅದರಂತೆ ಅರ್ಜಿಗಳನ್ನು ಸ್ವೀಕರಿಸಲು ಅವರು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕರು ಡಾ.ರಾಜಶೇಖರ ವಿಲಿಯಮ್ಸ್, ಮೀನುಗಾರಿಕೆ ಉಪ ನಿರ್ದೆಶಕ ಶ್ರೀಶೈಲ ಗಂಗನಹಳ್ಳಿ, ಭೂತನಾಳ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ. ಎಸ್.ವಿಜಯಕುಮಾರ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.