ADVERTISEMENT

ಬೆಳಗಾವಿಯಲ್ಲೇ ಅಧಿವೇಶನ ನಡೆಸಿ: ಶಾಸಕ ಎಂ.ಬಿ.ಪಾಟೀಲ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 9:52 IST
Last Updated 20 ಸೆಪ್ಟೆಂಬರ್ 2019, 9:52 IST
ಎಂ.ಬಿ.ಪಾಟೀಲ
ಎಂ.ಬಿ.ಪಾಟೀಲ   

ವಿಜಯಪುರ: ‘ಸಂತ್ರಸ್ತರು ಮುತ್ತಿಗೆ ಹಾಕುತ್ತಾರೆ ಎಂಬ ಭಯದಿಂದ ಬೆಳಗಾವಿ ಅಧಿವೇಶನವನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಅಧಿವೇಶನ ಬೆಳಗಾವಿಯಲ್ಲೇ ನಡೆಯಬೇಕು’ ಎಂದು ಶಾಸಕ ಎಂ.ಬಿ.ಪಾಟೀಲ ಆಗ್ರಹಿಸಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಂತ್ರಸ್ತರ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಪರಿಹಾರ ರೂಪಿಸಲು ಬೆಳಗಾವಿಯಲ್ಲೇ ಅಧಿವೇಶನ ನಡೆಸಬೇಕು’ ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನ್ನ ಕ್ಷೇತ್ರದ ಅನುದಾನವನ್ನೂ ತಡೆಹಿಡಿದಿದ್ದಾರೆ. ಈಗಿನ ಸರ್ಕಾರಕ್ಕೆ ಗೊತ್ತು, ಗುರಿ ಏನೂ ಇಲ್ಲ. ಸಮ್ಮಿಶ್ರ ಸರ್ಕಾರ ಇದಕ್ಕಿಂತ ನೂರು ಪಟ್ಟು ಚೆನ್ನಾಗಿತ್ತು’ ಎಂದು ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು.

ADVERTISEMENT

‘ಔರಾದ್ಕರ್ ವರದಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸವಾಗಿದೆ. ಕಾರಾಗೃಹ ಮತ್ತು ಅಗ್ನಿಶಾಮಕ ಸಿಬ್ಬಂದಿ ಎಲ್ಲರನ್ನೂ ಸೇರಿಸಿ ವರದಿಯನ್ನು ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ, ಕಾದು ನೋಡೋಣ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಪ್ರವಾಹ ಸಂತ್ರಸ್ತರ ಬದುಕಿನ ಜತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಅವರಿಗೆ ಅಪಮಾನವಾಗುವ ರೀತಿಯಲ್ಲಿ ಸಚಿವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಸಂತ್ರಸ್ತರ ವಿಷಯದಲ್ಲಿ ಈ ಸರ್ಕಾರಕ್ಕೆ ಬದ್ಧತೆಯೇ ಇಲ್ಲ’ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.