ADVERTISEMENT

ಕೆರೆ ತುಂಬುವ ಯೋಜನೆಗೆ ಅನುದಾನಕ್ಕೆ ಸಿಎಂಗೆ ಶಾಸಕ ಎಂ.ಬಿ.ಪಾಟೀಲ್ ಮನವಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 9:44 IST
Last Updated 9 ಜುಲೈ 2021, 9:44 IST
ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಶಾಸಕ ಎಂ.ಬಿ.ಪಾಟೀಲ್
ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಶಾಸಕ ಎಂ.ಬಿ.ಪಾಟೀಲ್   

ವಿಜಯಪುರ: ಜಿಲ್ಲೆಯ ಇಂಡಿ ತಾಲ್ಲೂಕಿನ 23 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುದಾನ ಒದಗಿಸುವಂತೆ ಕೋರಿ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಯಡಿಯೂರಪ್ಪನ ಅವರನ್ನು ಭೇಟಿ ಮಾಡಿ, ಚರ್ಚಿಸಿದ ಎಂ.ಬಿ.ಪಾಟೀಲ್‍ ಅವರು, ಭೀಮಾನದಿ ಪಾತ್ರದಲ್ಲಿ ನೀರಿನ ಕೊರತೆಯ ಕಾರಣ ಇಂಡಿ ಭಾಗದ ಕೆಲವು ಪ್ರದೇಶಕ್ಕೆ ನೀರಾವರಿ ಸೌಕರ್ಯ ಕಲ್ಪಿಸಲಾಗಿಲ್ಲ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಕೃಷ್ಣಾ ನದಿ ನೀರನ್ನು ಎತ್ತಿ, ಭೀಮಾ ಭಾಗದ ಈ ಹಳ್ಳಿಗಳಿಗೆ ನೀರೊದಗಿಸಲು ಏಷ್ಯಾದಲ್ಲಿಯೇ ಅತೀ ದೊಡ್ಡ 16ಕಿ.ಮೀ ಉದ್ದದ ತಿಡಗುಂದಿ ಅಕ್ವಾಡಕ್ಟ್ ನಿರ್ಮಿಸಿ, ಅಲ್ಲಿಂದ ಕಾಲುವೆ ಮೂಲಕ ಇಂಡಿ ಭಾಗದ 65 ಸಾವಿರ ಎಕರೆ ಪ್ರದೇಶ ನೀರಾವರಿ ಸೌಕರ್ಯ ಹಾಗೂ 23 ಕೆರೆಗಳನ್ನು ತುಂಬಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಅಕ್ವಾಡಕ್ಟ್ ಹಾಗೂ ಕಾಲುವೆ ಕಾರ್ಯ ಮುಗಿದಿದ್ದು, ನೀರು ಹರಿಸಲಾಗಿದೆ. ತಿಡಗುಂದಿ ಕಾಲುವೆಯಿಂದ ಲಿಫ್ಟ್ ಮಾಡಿ 23ಕೆರೆಗಳನ್ನು ತುಂಬಿಸುವ ಯೋಜನೆಗೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ದೊರೆತಿದ್ದರೂ ಹಣಕಾಸಿನ ಲಭ್ಯತೆ ಇಲ್ಲದ ಕಾರಣ ಕಾಮಗಾರಿ ಆರಂಭಗೊಂಡಿಲ್ಲ ಎಂದರು.

ADVERTISEMENT

ಇಂಡಿ ತಾಲ್ಲೂಕಿನ ಅತೀ ಬರಗಾಲ ಪೀಡಿತ ಈ ಹಳ್ಳಿಗಳು ಕುಡಿಯುವ ನೀರು ಹಾಗೂ ನೀರಾವರಿಯಿಂದ ವಂಚಿತರಾಗಿ ತತ್ತರಿಸಿದ್ದಾರೆ. ಆದರೂ ಇಲ್ಲಿನ ಜನ ಅಲ್ಪನೀರಿನಲ್ಲಿಯೇ ವಿಶ್ವಪ್ರಸಿದ್ದ ನಿಂಬೆ, ದಾಳಿಂಬೆ ಹಾಗೂ ದ್ರಾಕ್ಷಿ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಇವರಿಗೆ ನೆರವಾಗಲು ತಾವುಗಳು ಈ ಕುರಿತು ವಿಶೇಷ ಗಮನ ಹರಿಸಿ, ಹಣಕಾಸಿನ ನೆರವು ಒದಗಿಸಿದರೆ ಇಂಡಿ ಭಾಗ ನೀರಾವರಿಗೆ ಒಳಪಡುತ್ತದೆ ಹಾಗೂ ತಿಡಗುಂದಿ ಅಕ್ವಾಡೆಕ್ಟ್ ನಿರ್ಮಿಸಿದ ಉದ್ದೇಶವು ಸಫಲವಾಗುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ಸಕಾರಾತ್ಮಕವಾಗಿ ಸ್ಪಂದಿಸಿ, ಅಗತ್ಯ ಆರ್ಥಿಕ ನೆರವು ಒದಗಿಸಲು ಕ್ರಮ ಜರುವುದಾಗಿ ಭರವಸೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರು ಸಂಪಾದಿಸಿದ ಶಿವಾನುಭ ಪತ್ರಿಕೆಗಳನ್ನು ಮರುಮುದ್ರಿಸಿ, ಸಂಪುಟಗಳ ರೂಪದಲ್ಲಿ ಹೊರತರಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆರ್ಥಿಕ ನೆರವು ಒದಗಿಸಲು ಮುಖ್ಯಮಂತ್ರಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಪರವಾಗಿ ಎಂ.ಬಿ.ಪಾಟೀಲ್ ವಿನಂತಿಸಿದಾಗ, ಮುಖ್ಯಮಂತ್ರಿ ಯಡಿಯೂರಪ್ಪನವರು ಶಿವಾನುಭವ ಪತ್ರಿಕೆಗಳ ಸಮಗ್ರ ಸಂಪುಟಗಳನ್ನು ಹೊರತರಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೆರವು ಒದಗಿಸುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.