
ವಿಜಯಪುರ: ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟವು ಮತ್ತಷ್ಟು ತೀವ್ರಗೊಂಡಿದ್ದು, ಇದೀಗ ಆಹೋರಾತ್ರಿ ಧರಣಿ ನಡೆಸಲು ಹೋರಾಟ ಸಮಿತಿ ನಿರ್ಧರಿಸಿದೆ.
ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಹಾಗೂ ಸರ್ಕಾರದಿಂದಲೇ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯು ರವಿವಾರ 88 ದಿನ ಪೂರೈಸಿದೆ.
ಈ ಸಂದರ್ಭದಲ್ಲಿ ರೈತಪರ ಹೋರಾಟಗಾರ ಅರವಿಂದ ಕುಲಕರ್ಣಿ ಮಾತನಾಡಿ, ಕಳೆದ ಮೂರು ತಿಂಗಳಿಂದ ಹೋರಾಟ ನಡೆಯುತ್ತಿದ್ದರು ಇದುವರೆಗೂ ರಾಜ್ಯ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಇನ್ಮುಂದೆ ಅಹೋರಾತ್ರಿ ಧರಣಿ ಕೂಡಲು ತೀರ್ಮಾನಿಸಲಾಗಿದೆ. ಈ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದರು.
ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜಿಗೆ ಸಂಪೂರ್ಣವಾಗಿ ನಮ್ಮ ವಿರೋಧ ಇದೆ. ತಕ್ಷಣವೇ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಸರ್ಕಾರ ಪ್ರಕಟಿಸಬೇಕು. ಆದರೆ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರ ಹೆಸರು ಹೇಳುತ್ತಾರೆ. ಮತ್ತೊಂದೆಡೆ, ಜಿಲ್ಲೆಯ ಹೋರಾಟಗಾರರು ಹಾಗೂ ಜನರ ಬೇಡಿಕೆಗೆ ರಾಜ್ಯ ಸರ್ಕಾರವಾಗಲಿ, ಸಚಿವ ಎಂ.ಬಿ.ಪಾಟೀಲರಾಗಲಿ ಸ್ಪಂದಿಸುತ್ತಿಲ್ಲ. ಸರ್ಕಾರ ಖಾಸಗೀಕರಣದ ಪರವಾಗಿ ಕೆಲಸ ಮಾಡುವುದಾದರೆ ವಿಧಾನಸೌಧವನ್ನೂ ಖಾಸಗಿಯವರೆಗೆ ಕೊಟ್ಬುಬಿಡಲಿ ಎಂದರು.
ಧರಣಿಯಲ್ಲಿ ಹೋರಾಟ ಸಮಿತಿಯ ಮುಖಂಡರಾದ ಭಗವಾನ ರೆಡ್ಡಿ, ಲಲಿತಾ ಬಿಜ್ಜರಗಿ, ಅಕ್ರಮ ಮಾಶಾಳಕರ, ಬಾಬುರಾವ ಬೀರಕಬ್ಬಿ, ಸುರೇಶ ಬಿಜಾಪುರ, ಶ್ರೀನಾಥ ಪೂಜಾರಿ, ಗಿರೀಶ ಕಲಘಟಗಿ, ಜಗದೇವ ಸೂರ್ಯವಂಶಿ, ಮಲ್ಲಿಕಾರ್ಜುನ ಬಟಗಿ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.