ವಿಜಯಪುರ: ಬಸವನಬಾಗೇವಾಡಿ, ನಿಡಗುಂದಿ ಮತ್ತು ಕೊಲ್ಹಾರ ತಾಲ್ಲೂಕುಗಳನ್ನು ಬರಗಾಲ ಪೀಡಿತ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಕೃಷಿಕ ಸಮಾಜದ ಪದಾಧಿಕಾರಿಗಳು ಸಂಸದ ರಮೇಶ ಜಿಗಜಿಣಗಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
‘ಈ ಮೂರು ತಾಲ್ಲೂಕುಗಳನ್ನು ಕೇಂದ್ರ ಸರ್ಕಾರ ಬರಗಾಲ ಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದರಿಂದ ರೈತರು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು’ ಎಂದು ಆಗ್ರಹಿಸಿದರು.
‘ಸತತ 3–4 ವರ್ಷಗಳಿಂದ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಭೀಕರ ಬರಗಾಲ ಆವರಿಸಿದ್ದು, ಬಿತ್ತಿದ ಬೆಳೆ ಕೈ ಸೇರದೆ ರೈತರು ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸಿದೆ. ಕೂಡಲೇ ಈ ಬಗ್ಗೆ ಕೇಂದ್ರದ ಗಮನ ಸೆಳೆಯಬೇಕು’ ಎಂದು ಒತ್ತಾಯಿಸಿದರು.
ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಜಿಲ್ಲಾ ಕೃಷಿಕ ಸಮಾಜದ ಬಿ.ಎಲ್.ಪಾಟೀಲ, ಸಿಂದಗಿ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಗೊಲ್ಲಾಳಪ್ಪ ಚೌಧರಿ, ಬಸವನವಾಗೇವಾಡಿ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದರಾಮ ಅಂಗಡಗೇರಿ, ಉಪಾಧ್ಯಕ್ಷ ಹೊನಕೇರೆಪ್ಪ ತೆಲಗಿ, ಸೋಮನಗೌಡ ಪಾಟೀಲ, ಸದಾಶಿವ ಭರಟಗಿ, ಈರಣ್ಣ ದೇವರಗುಡಿ, ಕೃಷ್ಣಪ್ಪ ಬಮರಡ್ಡಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.