ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರನ್ನು ಶನಿವಾರ ನಗರದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಸಚಿವರ ಅಭಿಮಾನಿಗಳು, ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಚಿವರ ಸ್ವಾಗತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಚಿವರಿಗೆ ಹಾರ,ತುರಾಯಿ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಡೊಳ್ಳು ಕುಣಿತ, ಕರಡಿ ಮಜಲು, ನಾನಾ ಸಂಗೀತ ಮೇಳಗಳು, ಡಿಜೆ ಸೇರಿದಂತೆ ಜನಪದ ತಂಡಗಳು ಸಚಿವರ ಸ್ವಾಗತ ಮೆರವಣಿಗೆಗೆ ಮೆರಗು ನೀಡಿದವು.
ಆರಂಭದಲ್ಲಿ ಸಚಿವರು ಗುರುಪಾದೇಶ್ವರ ನಗರದಲ್ಲಿರುವ ಗದಗಿನ ತೋಂಟದಾರ್ಯ ಶಾಖಾ ಮಠಕ್ಕೆ ಭೇಟಿ ನೀಡಿದರು. ಗದಗ ತೋಂಟದಾರ್ಯ ಮಠದ ಡಾ ಸಿದ್ದರಾಮ ಮಹಾಸ್ವಾಮಿ ಹಾಗೂ ಅಭಿನವ ಸಿದ್ದಾರೂಢ ಸ್ವಾಮೀಜಿ, ಷಣ್ಮುಖಾರೂಢ ಸ್ವಾಮಿಜಿ ಅವರ ಆಶೀರ್ವಾದ ಪಡೆದರು.
ಕರಡಿ ಮಜಲು ಹಾಗೂ ಶಹನಾಹಿ ವಾದನಗಳ ಮೂಲಕ ಸಚಿವರನ್ನು ಸ್ವಾಗತಿಸಲಾಯಿತು. ಮಹಿಳೆಯರು ಸಚಿವರಿಗೆ ಆರತಿ ಬೆಳಗಿ ಸ್ವಾಗತಿಸಿದರು. ಮಠದ ಆವರಣದಲ್ಲಿ ಸಚಿವರು ಸಸಿ ನೆಟ್ಟು, ನೀರುಣಿಸಿದರು.
ಬಳಿಕ ಸಚಿವರನ್ನು ಶಿವಾಜಿ ಚೌಕದಿಂದ ಗಾಂಧಿಚೌಕ ಮೂಲಕ ಶ್ರೀ ಸಿದ್ಧೇಶ್ವರ ದೇವಸ್ಥಾನದ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.
ವಿಧಾನ ಪರಿಷತ್ ಸದಸ್ಯ ಸುನೀಲ್ಗೌಡ ಪಾಟೀಲ, ನಾಗಠಾಣ ಶಾಸಕ ವಿಠಲ ಕಟಕಧೋಂಡ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಆಲಗೂರ, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಮತ್ತಿತರರು ಇದ್ದರು.
ಜ್ಞಾನಯೋಗಾಶ್ರಮಕ್ಕೆ ಭೇಟಿ:
ಸಚಿವ ಎಂ. ಬಿ. ಪಾಟೀಲ ಅವರು ಜೂನ್ 4 ರಂದು ಸಂಜೆ 6.30ಕ್ಕೆ ನಗರದ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೇ, ಪ್ರತಿ ತಿಂಗಳು ಹುಣ್ಣಿಮೆ ಅಂಗವಾಗಿ ನಡೆಯುವ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Quote - ಸಚಿವನಾದ ಬಳಿಕ ಪ್ರಥಮ ಬಾರಿಗೆ ವಿಜಯಪುರಕ್ಕೆ ಆಗಮಿಸಿದ ನನಗೆ ಜನರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಜಿಲ್ಲೆಗೆ ಕೈಗಾರಿಕೆಗಳನ್ನು ತಂದು ಉದ್ಯೋಗ ಒದಗಿಸಲು ಆದ್ಯತೆ ನೀಡುತ್ತೇನೆ –ಎಂ.ಬಿ.ಪಾಟೀಲ ಬೃಹತ್ ಕೈಗಾರಿಕಾ ಸಚಿವ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.