ಬೆಟ್ಟದಪುರ: ಇಲ್ಲಿಗೆ ಸಮೀಪದ ಕಿತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕ ಕೃಷ್ಣಮೂರ್ತಿಯನ್ನು ವಜಾಗೊಳಿಸುವಂತೆ ಆಗ್ರಹಿಸಿದ ಗ್ರಾಮಸ್ಥರು, ಶಾಲೆಗೆ ಬೀಗ ಹಾಕಿ ಸೋಮವಾರ ಪ್ರತಿಭಟಿಸಿದರು.
4 ವರ್ಷಗಳಿಂದ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಈ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂದು ವಿದ್ಯಾರ್ಥಿಗಳು ಪೋಷಕರ ಬಳಿ ದೂರಿದ್ದರು. ಶಾಲೆಯ 6, 7ನೇ ತರಗತಿಯ ವಿದ್ಯಾರ್ಥಿನಿಯರನ್ನು ಪಾಠ ಹೇಳಿಕೊಡುವ ನೆಪದಲ್ಲಿ ಪ್ರತ್ಯೇಕ ಕೊಠಡಿಗಳಿಗೆ ಕರೆಸಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಆರೋಪಿಸಿದ್ದರು. ಈ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಪೋಷಕರು ದೂರಿದರೂ, ಯಾವುದೇ ಕ್ರಮ ತೆಗೆದುಕೊಳ್ಳದಿದ್ದರಿಂದ ಆಕ್ರೋಶಗೊಂಡ ಪಾಲಕರು ಶಾಲೆ ಮುಂಭಾಗ ಜಮಾಯಿಸಿ ಪ್ರತಿಭಟಿಸಿದರು.
ಬಿಆರ್ಸಿ ಹೇಮಂತ್ಕುಮಾರ್ ಶಾಲೆಗೆ ಭೇಟಿ ನೀಡಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದರು. ತಕ್ಷಣದಿಂದಲೇ ಆರೋಪಿತ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಲು ಬಿಇಒ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.