ADVERTISEMENT

‘ಪ್ರವಾಹ ಸಂತ್ರಸ್ತರಿಗೆ ಚಿಕಿತ್ಸೆ’

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2019, 10:00 IST
Last Updated 17 ಆಗಸ್ಟ್ 2019, 10:00 IST
ಎಂ.ಬಿ.ಪಾಟೀಲ
ಎಂ.ಬಿ.ಪಾಟೀಲ   

ವಿಜಯಪುರ: ‘ಬಿಎಲ್‌ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆರು ತಂಡಗಳು ನೆರೆ ಹಾವಳಿ ಪೀಡಿತ ಪ್ರದೇಶಗಳಲ್ಲಿ ಸಂಚರಿಸಿ, ಸಂತ್ರಸ್ತರಿಗೆ ಚಿಕಿತ್ಸೆ ನೀಡಿವೆ’ ಎಂದು ಶಾಸಕ ಎಂ.ಬಿ.ಪಾಟೀಲ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೈದ್ಯರ 5–6 ತಂಡಗಳನ್ನು ರಚಿಸಲಾಗಿತ್ತು. ಜಿಲ್ಲಾಡಳಿತ ಬಯಸಿದಲ್ಲಿ ಅವರು ಭೇಟಿ ನೀಡಿ ಸೇವೆ ನೀಡಿದ್ದಾರೆ. ಇದನ್ನು ಮುಂದುವರಿಸಿಕೊಂಡು ಹೋಗಲಾಗುವುದು. ಇದು ನಮ್ಮ ಸಾಮಾಜಿಕ ಬದ್ಧತೆ ಮತ್ತು ಕರ್ತವ್ಯವಾಗಿದೆ’ ಎಂದರು.

‘ಚಿಕ್ಕಗಲಗಲಿ, ಬಬಲಾದ ಸೇರಿ 3–4 ಹಳ್ಳಿಗಳಲ್ಲಿ ಬೆಳೆ ಹಾಗೂ 60 ಮನೆಗಳಿಗೆ ಹಾನಿಯಾಗಿದೆ. ಭೂಸ್ವಾಧೀನವಾಗದ ಪ್ರದೇಶದಲ್ಲಿ ರೈತರು ಬಿತ್ತನೆ ಮಾಡಿರುವುದರಿಂದ ಅವರಿಗೆ ಪರಿಹಾರ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಿದೆ. 1995ರಲ್ಲಿ ಭೂಸಂತ್ರಸ್ತರಿಗೆ ಪರಿಹಾರ ನೀಡಲಾಗಿತ್ತು. ಆದರೆ, ಅವರು ಹಣವನ್ನು ಖರ್ಚು ಮಾಡಿದ್ದಾರೆ. ಹೀಗಾಗಿ ಅವರೆಲ್ಲರಿಗೂ ಈಗ ಪುನರ್ವಸತಿ ಕಲ್ಪಿಸಬೇಕಾಗಿದೆ’ ಎಂದು ತಿಳಿಸಿದರು.

ADVERTISEMENT

‘ಮುಳುಗಡೆ ಪ್ರದೇಶಗಳ ಶಾಶ್ವತ ಸ್ಥಳಾಂತರದ ಅವಶ್ಯಕತೆ ಇದೆ. ಸಂತ್ರಸ್ತರು ತಾತ್ಕಾಲಿಕವಾಗಿ 18/17 ಅಡಿ ಶೆಡ್ ನಿರ್ಮಿಸಿಕೊಡುವಂತೆ ಕೇಳುತ್ತಿದ್ದಾರೆ. ಶೌಚಾಲಯ, ಸ್ನಾನಗೃಹ, ಶುದ್ಧ ಕುಡಿಯುವ ನೀರು ಒದಗಿಸಬೇಕಾಗಿದೆ. ಈ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿ, ಮುಖ್ಯಮಂತ್ರಿ ಜತೆ ಚರ್ಚೆ ನಡೆಸುತ್ತೇನೆ. ನಾನು ವಿರೋಧ ಪಕ್ಷದಲ್ಲಿದ್ದರೂ ಸರ್ಕಾರಕ್ಕೆ ಸಹಕಾರ ನೀಡುತ್ತೇನೆ’ ಎಂದರು.

‘ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ಕೇಂದ್ರ ಸರ್ಕಾರದ ಪಾತ್ರ ಮಹತ್ವದ್ದಾಗಿದೆ. ₹40 ಸಾವಿರ ಕೋಟಿ ಬೆಳೆಹಾನಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಮೀಕ್ಷೆ ಪೂರ್ಣಗೊಂಡಿಲ್ಲವಾದರೂ, ಅವರಿಗೆ ಮಾಹಿತಿ ಇದ್ದೇ ಇರುತ್ತದೆ. ಹೀಗಾಗಿ ಪಕ್ಷಭೇದ ಮರೆತು ನಾವೆಲ್ಲರೂ ಕೆಲಸ ಮಾಡಬೇಕಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.