ವಿಜಯಪುರ: ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹಾಗೂ ಜಿಲ್ಲಾಧಿಕಾರಿ ರಿಷಿ ಆನಂದ ಅವರು ಡೋಣಿ ನದಿ ತೀರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
ಜಿಲ್ಲೆಯ ಹರನಾಳ, ದಾಶ್ಯಾಳ ಸಾರವಾಡ, ಎನ್.ಎಚ್. 218 ಹೊನಗನಹಳ್ಳಿ, ಉಕುಮನಾಳ, ಹಿಟ್ನಳ್ಳಿ ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಜ್ಗಳ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗಳಲ್ಲಿ ಹೂಳು ತುಂಬಿಕೊಂಡು ಸೇತುವೆಯ ಎತ್ತರ ಕಡಿಮೆಯಾಗಿ ನೀರಿನ ಶೇಖರಣೆ ಸಾಧ್ಯವಾಗದೇ ಇರುವುದರಿಂದ ನದಿಯಲ್ಲಿ ಹರಿಯುವ ನೀರಿನ ಒತ್ತಡ ಹೆಚ್ಚಾಗಿ ನೀರು ತನ್ನ ಪಥ ಬದಲಿಸಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಇದರಿಂದ ಡೋಣಿಗೆ ಸೇರುವ ಕಾಲುವೆಗಳ ಪರಿಶೀಲನೆ ಹಾಗೂ ಡೋಣಿ ವ್ಯಾಪ್ತಿಯ ವಿವಿಧೆಡೆ ಚೆಕ್ ಡ್ಯಾಂ ನಿರ್ಮಾಣಕ್ಕೆ ಇರುವ ಅವಕಾಶಗಳು ಮತ್ತು ಡೋಣಿ ನದಿಯಿಂದ ಬೇರೆ ಕಾಲುವೆ, ಕೆರೆ-ಕಟ್ಟೆಗಳಿಗೆ ನೀರನ್ನು ಹರಿಸುವುದು ಸೇರಿದಂತೆ ಪ್ರವಾಹ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಲ್. ರೂಪಾ, ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಬಸವರಾಜ ಕುಂಬಾರ, ಭೂಮಾಪನ ಇಲಾಖೆಯ ಉಪನಿರ್ದೇಶಕ ಮಹಾಂತೇಶ ಮುಳಗುಂದ, ಜಲ ಬಿರಾದರಿ ಸಂಸ್ಥೆಯ ಪ್ರಮುಖ ಪೀಟರ್ ಅಲೆಕ್ಸಾಂಡರ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.