ADVERTISEMENT

‘ಗೃಹಭಾಗ್ಯ’ ಹಕ್ಕುಪತ್ರ ವಿತರಣೆಗೆ ಸೂಚನೆ

ಜಿಲ್ಲಾಧಿಕಾರಿಯಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:35 IST
Last Updated 18 ಜೂನ್ 2025, 15:35 IST
ವಿಜಯಪುರ ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜು ಹಿಂಭಾಗದಲ್ಲಿ ಪಿಎಂಎವೈ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಬುಧವಾರ ಭೇಟಿ ನೀಡಿ, ಪರಿಶೀಲಿಸಿದರು 
ವಿಜಯಪುರ ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜು ಹಿಂಭಾಗದಲ್ಲಿ ಪಿಎಂಎವೈ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಬುಧವಾರ ಭೇಟಿ ನೀಡಿ, ಪರಿಶೀಲಿಸಿದರು    

ವಿಜಯಪುರ: ವಿಜಯಪುರ ನಗರದಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗುಂಪು ಮನೆಗಳ ನಿರ್ಮಾಣ, ನಗರದ ರಿಂಗ್ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಯುಜಿಡಿ ಸ್ಥಳಾಂತರ, ಕುಡಿಯುವ ನೀರಿನ ಪೈಪ್‌ ಲೈನ್ ಸ್ಥಳಾಂತರಿಸುವ ಕಾಮಗಾರಿ, ಅರಕೇರಿ ಜಾಕವೆಲ್‍ನಿಂದ ಕೆರೆಗೆ ನೀರು ತುಂಬಿಸುವ ಕಾಮಗಾರಿ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. 

ಪೌರಕಾರ್ಮಿಕರ ಗೃಹಭಾಗ್ಯ (ಪಿ.ಕೆ.ಜಿ.ಬಿ)ಯೋಜನೆಯಡಿ ವಿಜಯಪುರ ನಗರದ ಹಂಚನಾಳ ಪಿ.ಎಚ್ ಗ್ರಾಮಕ್ಕೆ ಭೇಟಿ ನೀಡಿ, ಈಗಾಗಲೇ ನಿರ್ಮಾಣಗೊಂಡಿರುವ ಹಾಗೂ ಹಂಚಿಕೆ ಮಾಡಲಾದ ಜಿ+2 ಮಾದರಿಯ 56 ಗುಂಪು ಮನೆಗಳಲ್ಲಿ ವಾಸವಾಗಿರುವ ಫಲಾನುಭವಿಗಳ ಸಮಸ್ಯೆಯನ್ನು ಆಲಿಸಿದರು.

ಮೂಲ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಗೆ ಕ್ರಮ ವಹಿಸುವಂತೆ ತಿಳಿಸಿದರು.

ADVERTISEMENT

ನಿರ್ಮಾಣ ಹಂತದಲ್ಲಿರುವ 60 ಗುಂಪು ಮನೆಗಳ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಉಳಿದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜು ಹಿಂಭಾಗದಲ್ಲಿ ಪಿಎಂಎವೈ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಜಿ+1 ಮಾದರಿಯ 1493 ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಕ್ಕು ಪತ್ರ ಪಡೆದುಕೊಂಡು ವಾಸ ಮಾಡುತ್ತಿರುವ ಫಲಾನುಭವಿಗಳ ಮನೆಗಳಿಗೆ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಡ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ನಗರದ ರಿಂಗ್ ರಸ್ತೆ  ನೇತಾಜಿ ಸುಭಾಷಚಂದ್ರ ಭೋಸ್‌ ವೃತ್ತದಿಂದ ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ ವರೆಗೆ ವಿದ್ಯುತ್ ಕಂಬಗಳ ಸ್ಥಳಾಂತರ, ಯು.ಜಿ.ಡಿ ಲೈನ್ ಸ್ಥಳಾಂತರ ಹಾಗೂ ಕುಡಿಯುವ ನೀರಿನ ಪೈಪ್‌ ಲೈನ್‍ಗಳನ್ನು ಸ್ಥಳಾಂತರಿಸಿ, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಯುದ್ದೋಪಾದಿಯಲ್ಲಿ ಕೈಗೊಂಡು ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ವಿಜಯಪುರ ನಗರದ ವಿವಿಧ ವಾರ್ಡ್‌ಗಳಿಗೆ ಕುಡಿಯುವ ನೀರಿನ ಮೂಲವಾಗಿರುವ ಭೂತನಾಳ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ಮುಖ್ಯ ಪಾತ್ರವಹಿಸುವ ಅರಕೇರಿ ಜಾಕ್‍ವೇಲ್‍ಗೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.