ADVERTISEMENT

ಹೆಸರುಕಾಳು ಖರೀದಿ ಕೇಂದ್ರ ಆರಂಭಕ್ಕೆ ಸೂಚನೆ

ಜಿಲ್ಲೆಯಲ್ಲಿ ಪ್ರಸಕ್ತ 50,340 ಕ್ವಿಂಟಲ್ ಇಳುವರಿ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 12:04 IST
Last Updated 21 ಸೆಪ್ಟೆಂಬರ್ 2020, 12:04 IST
ವಿಜಯಪುರದಲ್ಲಿ ಸೋಮವಾರ ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಮಾತನಾಡಿದರು 
ವಿಜಯಪುರದಲ್ಲಿ ಸೋಮವಾರ ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಮಾತನಾಡಿದರು    

ವಿಜಯಪುರ: ಜಿಲ್ಲೆಯತಾಲ್ಲೂಕು ಕೇಂದ್ರಗಳಲ್ಲಿ ಹೆಸರುಕಾಳು ಖರೀದಿ ಕೇಂದ್ರಗಳನ್ನು ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಹೆಸರುಕಾಳು ಮಾರಾಟವಾಗುತ್ತಿರುವುದರಿಂದ, ವಿಜಯಪುರ, ಬಸವನ ಬಾಗೇವಾಡಿ, ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿ ಹಾಗೂ ಇಂಡಿ ತಾಲ್ಲೂಕುಗಳಲ್ಲಿ ಬೆಂಬಲಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ, ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.

ADVERTISEMENT

ಜಿಲ್ಲೆಯಲ್ಲಿ 6712 ಹೆಕ್ಟೆರ್‌ ಕ್ಷೇತ್ರದಲ್ಲಿ ಹೆಸರು ಬಿತ್ತನೆಯಾಗಿದ್ದು, ಕೃಷಿ ಇಲಾಖೆ ಮಾಹಿತಿ ಪ್ರಕಾರ ಅಂದಾಜು 50,340 ಕ್ವಿಂಟಲ್ ಇಳುವರಿ ಬರಬಹುದು ಎಂದು ನೀರಿಕ್ಷಿಸಲಾಗಿದೆ. ಜಿಲ್ಲೆಯ ಯಾವ ರೈತರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಕೆಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‍ಗೆ ₹ 7196 ಬೆಲೆ ನಿಗದಿ ಮಾಡಿದ್ದು, ಪ್ರತಿ ಎಕರೆಗೆ 4 ಕ್ವಿಂಟಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 4 ಕ್ವಿಂಟಲ್ ಖರೀದಿ ಪ್ರಮಾಣ ನಿಗದಿಪಡಿಸಿ ಖರೀದಿಸಬೇಕು ಎಂದರು.

ರೈತರ ಹೆಸರಿನ ಆಧಾರ್‌ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ಡಿ.ಬಿ.ಐ ಮೂಲಕ ಜಮಾ ಆಗುವಂತೆ ಪಾವತಿ ಮಾಡಬೇಕು ಎಂದು ಸೂಚಿಸಿದರು.

ಹೆಸರುಕಾಳ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಹೆಸರುಕಾಳು ಖರೀದಿಸದಂತೆ ಹಾಗೂ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಬೆಂಬಲಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಕೊರೊನಾ ಹಿನ್ನೆಲೆ ಪರಸ್ಪರ ಅಂತರ ಕಾಪಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ಎ.ಪಿ.ಎಂ.ಸಿ ಸಹಾಯಕ ನಿರ್ದೇಶಕ ಛಬನೂರ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.