ADVERTISEMENT

ಕೈಗಾರಿಕಾ ನಿವೇಶನ ಹಂಚಿಕೆಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 14:02 IST
Last Updated 12 ಮಾರ್ಚ್ 2021, 14:02 IST
ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಶುಕ್ರವಾರ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು
ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಶುಕ್ರವಾರ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು   

ವಿಜಯಪುರ: ಜಿಲ್ಲೆಯ ಮುಳವಾಡ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣವಾದ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಬೆಳಗಾವಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ನಿರ್ವಹಣಾಧಿಕಾರಿ ಎನ್. ಶಿವಶಂಕರ್, ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 3239 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದು, ಮೊದಲನೇ ಹಂತದಲ್ಲಿ 564 ಎಕರೆ ಅಭಿವೃದ್ಧಿಪಡಿಸಿರುವುದಾಗಿ ತಿಳಿಸಿದರು.

307 ಎಕರೆ ಜಾಗದಲ್ಲಿ 147 ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈಗಾಗಲೇ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಲಾಗಿದೆ ಮತ್ತು ರೋಣಿಹಾಳ ಸಬ್‍ಸ್ಟೇಷನ್ ಮೂಲಕ 5 ಮೆಗಾವ್ಯಾಟ್ ವಿದ್ಯುತ್ ಕಾಮಗಾರಿ ಪ್ರಗತಿ ಹಂತದಲ್ಲಿರುವದಾಗಿ ತಿಳಿಸಿದರು.

ADVERTISEMENT

ಮೂಲಭೂತ ಸೌಕರ್ಯಗಳಾದ ರಸ್ತೆ ನೀರು ಒಳಚರಂಡಿ ವಿದ್ಯುತ್ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರ ಶೆಟ್ಟರ್, ಇದು ರಾಜ್ಯದಲ್ಲಿಯೇ ಇದುವರೆಗೆ ಪೂರ್ಣಪ್ರಮಾಣದಲ್ಲಿ ಅಭಿವೃದ್ಧಿಪಡಿಸಿ ಹಂಚಿಕೆ ಮಾಡುತ್ತಿರುವ ಮೊದಲ ಕೈಗಾರಿಕಾ ಪ್ರದೇಶ ಎಂದರು.

ನಿವೇಶನಗಳ ಹಂಚಿಕೆಗಾಗಿ ಸ್ವೀಕರಿಸಲಾದ ಅರ್ಜಿಗಳನ್ನು ನಿಯಮಾನುಸಾರ ಅರ್ಹ ಫಲಾನುಭವಿಗಳಿಗೆ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಮೂಲಕ ಕೂಡಲೇ ಹಂಚಿಕೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ನಂತರ ವಿಜಯಪುರದ ಮಹಾಲ ಬಾಗಾಯತ್ ಹಾಗೂ ಅಲಿಯಾಬಾದ್‌ ಪ್ರದೇಶಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಕೈಗಾರಿಕಾ ಪ್ರದೇಶದ ಮಯೂರ್ ಇಂಡಸ್ಟ್ರೀಸ್, ಪಂಚಮ್ ಇಂಡಸ್ಟ್ರೀಸ್ ಹಾಗೂ ರಾಜಗುರು ಫುಡ್ಸ್ ಕೈಗಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಶಾಸಕ ಎ.ಎಸ್ ಪಾಟೀಲ ನಡಹಳ್ಳಿ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ್, ಎನ್. ಶಿವಶಂಕರ್,ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್, ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ, ಕೈಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಉದ್ದಿಮೆದಾರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.