ವಿಜಯಪುರ: ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪ್ರಾಯೋಗಿಕವಾಗಿ ಸಿದ್ಧ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಮಾರು ₹1.50 ಕೋಟಿ ಮೊತ್ತದಲ್ಲಿ ಅಗ್ರೋ ಕಾಪ್ ಸಂಸ್ಥೆಯ ಸಹಕಾರದೊಂದಿಗೆ ಈ ಯೋಜನೆ ಜಾರಿ ಮಾಡುತ್ತಿರುವುದಾಗಿ ಹೇಳಿದರು.
ಈ ಪೌಷ್ಟಿಕ ಆಹಾರವನ್ನು 30 ದಿನ ಸೇವಿಸಿದ ಬಳಿಕ ಮಕ್ಕಳಲ್ಲಿ ಪೌಷ್ಟಿಕತೆ ವೃದ್ಧಿಯಾದ ಬಗ್ಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಂದ ವರದಿಯನ್ನು ಪಡೆದುಕೊಳ್ಳಲಾಗುವುದು. ಪೌಷ್ಟಿಕತೆ ವೃದ್ಧಿಯಾಗಿದ್ದು ಕಂಡುಬಂದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು.
ಕೋವಿಡ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ವಿಜಯಪುರ ಜಿಲ್ಲೆಯ 4022 ಅಪೌಷ್ಟಿಕ ಮಕ್ಕಳಿಗೆ ಸಿದ್ಧ ಪೌಷ್ಟಿಕ ಆಹಾರವನ್ನು ಪ್ರಾಯೋಗಿಕವಾಗಿ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಡಿಮೆ ತೂಕ ಹೊಂದಿರುವ 3820 ಮಕ್ಕಳು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಸುಮಾರು 202 ಮಕ್ಕಳು ಸೇರಿದಂತೆ 4022 ಮಕ್ಕಳಿಗೆ ತಿಂಗಳಿಗೆ ಅಗತ್ಯವಿರುವಷ್ಟ ವಿತರಿಸಲಾಗುತ್ತಿದೆ ಎಂದರು.
ಕೋವಿಡ್-19 ಹಿನ್ನೆಲೆಯಲ್ಲಿ ಅಂಗನವಾಡಿಗಳನ್ನು ಮುಚ್ಚಲಾಗಿದ್ದು, ಅಂಗನವಾಡಿಯಲ್ಲಿ ದಾಖಲಾತಿ ಪಡೆದಿರುವ ಮಕ್ಕಳಿಗೆ ಅಂಗನವಾಡಿ ಸಹಾಯಕಿಯರ ಮೂಲಕ ಮನೆಮನೆಗೆ ತೆರಳಿ ಆಹಾರ ಪದಾರ್ಥವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಅಂತರ ಕಾಯ್ದುಕೊಳ್ಳುವುದು, ಮಾಸ್ಕ್, ಸ್ಯಾನಿಟೈಜರ್ ಹಾಗೂ ದೇಸಿಯ ಆಹಾರ ಪದ್ಥತಿಯನ್ನು ಬಳಕೆ ಮೂಲಕ ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡು ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ಭಯಪಡದೆ ಅದರ ಜೊತೆಗೆ ಬದುಕುವುದನ್ನು ಕಲಿಯಬೇಕಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರಡ್ಡಿ, ಆಗ್ರೋ ಕಾಪ್ ಸಂಸ್ಥೆಯ ಸಿದ್ಧಾರ್ಥ ಬಿ, ಉದ್ಯಮಿ ಸಂದೇಶ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ಆರ್.ಅಲಗೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಸುರಪುರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.