ವಿಜಯಪುರ: ಚಡಚಣ ತಾಲ್ಲೂಕಿನ ಕರ್ನಾಟಕ- ಮಹಾರಾಷ್ಟ್ರ ಗಡಿಗ್ರಾಮವಾದ ಶಿರಾಡೋಣದಲ್ಲಿ ಕೋವಿಡ್ 19 ಲಸಿಕೆ ಪಡೆಯಲು ಜನರು ಉದ್ದನೆಯ ಸರದಿ ಸಾಲಿನಲ್ಲಿ ನಿಂತಿರುವುದು ಭಾನುವಾರ ಕಂಡುಬಂದಿತು.
ಮಹಾರಾಷ್ಟ್ರದಲ್ಲಿ ಕೋವಿಡ್ ಡೆಲ್ಟಾ ಪ್ಲಸ್ ವೈರಸ್ ಪ್ರಕರಣಗಳು ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಹಾಗೂ ಮೂರನೇ ಅಲೆ ಭೀತಿ ಎದುರಾಗಿರುವುದರಿಂದ ರಾಜ್ಯದ ಗಡಿ ಭಾಗದಲ್ಲಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.
ಅಂತರ ರಾಜ್ಯ ಚೆಕ್ ಪೋಸ್ಟ್ ಗಳಾದ ಶಿರಾಡೋಣ, ಧೂಳಖೇಡ(ಝಳಕಿ)ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ.
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರು 72 ಗಂಟೆಗಳ ಮೊದಲು ಪಡೆದಿರುವ ಆರ್.ಟಿ.ಪಿ.ಸಿ.ಆರ್.ನೆಗೆಟಿವ್ ವರದಿ ಇದ್ದರೆ ಮಾತ್ರ ರಾಜ್ಯ ಪ್ರವೇಶಿಸಲು ಅನುಮತಿ ನೀಡಲಾಗುತ್ತಿದೆ.
ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಚಡಚಣ ತಾಲ್ಲೂಕಿನ 41 ಗ್ರಾಮ, ಇಂಡಿ ತಾಲ್ಲೂಕಿನ 35 ಹಾಗೂ ತಿಕೋಟಾ ತಾಲ್ಲೂಕಿನ 20 ಮತ್ತು ವಿಜಯಪುರ ತಾಲ್ಲೂಕಿನ 8 ಗ್ರಾಮಗಳು ಸೇರಿದಂತೆ ಜಿಲ್ಲೆಯ ಒಟ್ಟು 104 ಗ್ರಾಮಗಳ ವ್ಯಾಪ್ತಿಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹರಿಗೆ ಕೋವಿಡ್ ಲಸಿಕೆ ಆದ್ಯತೆ ಮೇರೆಗೆ ಹಾಕಿಸಲು ಜಿಲ್ಲಾಡಳಿತ ವಿಶೇಷ ಒತ್ತು ನೀಡಿದೆ.
ಮಹಾರಾಷ್ಟ್ರದಲ್ಲಿ ಸಂಭವನೀಯ ಮೂರನೇ ಅಲೆಯ ಲಕ್ಷಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಮುನ್ನೆಚ್ಚರಿಕೆಯೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.