ವಿಜಯಪುರ: ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಸ್ಪರ್ಧಿ ಶೇಖರಗೌಡ ಮಾಲಿಪಾಟೀಲ ತಿಳಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾದರಿ ಕನ್ನಡ ಶಾಲೆಯನ್ನು ಸ್ಥಾಪನೆ ಮಾಡಲಾಗುವುದು. ಪ್ರತಿವರ್ಷ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ವಿವಿಧ ಸಾಂಸ್ಕೃತಿಕ ಸಮಾವೇಶ ಆಯೋಜನೆ ಮಾಡುವ ಉದ್ದೇಶವಿದೆ ಎಂದರು.
ರಾಜ್ಯದ ವಿವಿಧೆಡೆ ಉದಯೋನ್ಮುಖ ಹಾಗೂ ಯುವ ಬರಹಗಾರರ ಕಮ್ಮಟ, ಶಿಬಿರಗಳ ಆಯೋಜನೆ ಮಾಡಲಾಗುವುದು ಎಂದು ಹೇಳಿದರು.
ಪರಿಷತ್ ಪ್ರಕಟಣೆಗಳ ಡಿಜಿಟಲೀಕರಣ ಹಾಗೂ ಪರಿಷತ್ ಪ್ರಕಟಣೆಗಳ ಆನ್ ಲೈನ್ ಮಾರಾಟ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿರುವ ಅಪರೂಪದ ಮೌಲಿಕ ಗ್ರಂಥಗಳ ಮರುಮುದ್ರಣಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಪ್ರೌಢಶಾಲೆಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಳೆಗನ್ನಡ ಹಾಗೂ ಆಧುನಿಕ ಸಾಹಿತ್ಯದ ಮರು ಓದು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಮೇ 9ರಂದು ನಡೆಯುವ ಕಸಾಪ ಚುನಾವಣೆಯಲ್ಲಿ ತಮಗೆ ಮತಹಾಕಿ ಗೆಲ್ಲಿಸುವ ಮೂಲಕ ಕನ್ನಡ ಸೇವೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಪರಿಷತ್ತುನ್ನು ಸದೃಡಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಡಾ.ಡಿ.ಆರ್.ನಿಡೋಣಿ, ಚಂದ್ರಶೇಖರ ದೇವರೆಡ್ಡಿ ಪತ್ರಿಕಾಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.