ಮುದ್ದೇಬಿಹಾಳ: ರೈತರಿಗೆ ಸರಿಯಾದ ಮಾಹಿತಿ ನೀಡದಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಆರ್.ಬಿ.ರುದ್ರವಾಡಿ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ಮುಖಂಡರು ಗುರುವಾರ ತಹಶೀಲ್ದಾರ್ ಜಿ.ಎಸ್.ಮಳಗಿಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನಲ್ಲಿ ಎರಡು ತಿಂಗಳಿಂದ ಸತತ ಮಳೆಯಾಗುತ್ತಿದ್ದು, ಬೆಳೆಹಾನಿ ಆಗಿದೆ. ಬೆಳೆ ರಕ್ಷಣೆಯ ಗೂಡಿನ ಬಂದೋಬಸ್ತ್ ಸಲುವಾಗಿ ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ವಿತರಿಸಲಾಗುತ್ತಿರುವ ತಾಡಪತ್ರಿ ಕೇಳಲು ಇಲಾಖ ಕಚೇರಿಗೆ ಹೋದರೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ. ಗ್ರಾಮ ಸಹಾಯಕರು ಸಾಮಗ್ರಿ ಬಂದಿಲ್ಲ ಎಂದು ಉತ್ತರ ನೀಡುತ್ತಿದ್ದಾರೆ. ಸುಮಾರು 2,000 ತಾಡಪತ್ರಿಗಳನ್ನು ಅಕ್ರಮವಾಗಿ ಮಾರಾಟ ಮಾಡಿರುವುದು ಕಂಡುಬಂದಿದೆ ಎಂದು ಆರೋಪಿಸಿದರು.
ಈ ವಿಷಯವನ್ನು ಈಗಾಗಲೇ ಜಂಟಿ ಕೃಷಿ ನಿರ್ದೇಶಕರ ಗಮನಕ್ಕೂ ತರಲಾಗಿದೆ. ಕೃಷಿ ಜಾಗೃತ ದಳದ ಬೆಳಗಾವಿ ತಂಡವು ತಾಲ್ಲೂಕಿನಲ್ಲಿ ಅನಧಿಕೃತವಾಗಿ ಬೀಜ, ಗೊಬ್ಬರ, ಕ್ರಿಮಿನಾಶಕ ಸಂಗ್ರಹಿಸಿದ್ದ ಪ್ರಕರಣ ಪತ್ತೆ ಹಚ್ಚಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಸಂಘದ ಜಿಲ್ಲಾ ಘಟಕದ ಧ್ಯಕ್ಷ ಸಿದ್ದನಗೌಡ ಬಿರಾದಾರ ವಕೀಲರು, ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ತಾಲ್ಲೂಕು ಘಟಕದ ಅಧ್ಯಕ್ಷ ಅಯ್ಯಣ್ಣ ಬಿದರಕುಂದಿ, ಪ್ರಧಾನ ಕಾರ್ಯದರ್ಶಿ ವೈ.ಎಲ್.ಬಿರಾದಾರ, ಎಚ್.ಬಿ.ಬಾದರದಿನ್ನಿ, ಎಸ್.ಸಿ.ಕೊಂಡಗೂಳಿ, ಹುಸೇನಸಾ ಕೊಂಡಗೂಳಿ, ಎಚ್.ಕೆ.ನದಾಫ, ಹಣಮಪ್ಪ ಬೋಳಿ, ಮಲ್ಲಪ್ಪ ನರಸಣಗಿ, ನಾಗಪ್ಪ ಬಿರಾದಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.