ನಿಡಗುಂದಿ : ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟ ಹೆಚ್ಚಿಸುವುದು ಹಾಗೂ ರಾಷ್ಟ್ರೀಯ ಯೋಜನೆಯೆಂದು ಘೋಷಿಸುವಂತೆ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ ಸೋಮವಾರ ಹೋರಾಟ ಸಮಿತಿ ನೇತೃತ್ವದಲ್ಲಿ ನಿಡಗುಂದಿ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.
ಸ್ವಾಮೀಜಿಗಳು, ರೈತರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.
ಪ್ರತಿಭಟನಾ ಸಮಾವೇಶಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ, ನಿಡಗುಂದಿ ರುದ್ರೇಶ್ವರ ಮಠದ ರುದ್ರಮುನಿ ಸ್ವಾಮೀಜಿ, ಚಿಮ್ಮಲಗಿ ಸಿದ್ಧರೇಣುಕ ಸ್ವಾಮೀಜಿ, ಮಹಾದೇವ ಸ್ವಾಮೀಜಿ, ಹುಣಶ್ಯಾಳದ ಸಂಗನಬಸವ ಸ್ವಾಮೀಜಿ, ಪಡೇಕನೂರದ ಮಲ್ಲಿಕಾರ್ಜುನ ಸ್ವಾಮೀಜಿ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮತ್ತಿತರರು ಚಾಲನೆ ನೀಡಿದರು.
ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕಿದೆ. ರೈತರ ಹಿತ ಕಾಪಾಡಲು ನ್ಯಾಯಾಧೀಕರಣದ ತೀರ್ಪಿನಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಮಹಾರಾಷ್ಟ್ರ ಸರ್ಕಾರ ಉತ್ತರ ಕರ್ನಾಟಕದ ರೈತರನ್ನು ಬಲಿ ತೆಗೆದುಕೊಳ್ಳಲು ಹೊರಟಿದೆ. ಆಲಮಟ್ಟಿ ಜಲಾಶಯದ ಎತ್ತರದಿಂದ ಮಹಾರಾಷ್ಟ್ರದ ಹಳ್ಳಿಗಳಿಗೆ ಯಾವುದೇ ತೊಂದರೆ ಆಗದಿದ್ದರೂ ವಿನಾಕಾರಣ ಕ್ಯಾತೆ ತೆಗೆದಿದೆ ಎಂದು ಆರೋಪಿಸಿದರು.
2010ರಲ್ಲಿ ನ್ಯಾ.ಬ್ರಿಜೇಶಕುಮಾರ ನೇತೃತ್ವದ 2ನೇ ನ್ಯಾಯಾಧೀಕರಣವು ತೀರ್ಪು ನೀಡಿದ್ದು 2013ರಲ್ಲಿ ಅಂತಿಮ ತೀರ್ಪು ನೀಡಿ ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀ.ಗೆ ಹೆಚ್ಚಿಸಲು, ಗೇಟ್ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟವಾಗಿ ತಿಳಿಸಿದೆ. ಆ ತೀರ್ಪಿನಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಎ.ಡಿ.ಅಮರವಾದಗಿ ಹೋರಾಟಗಾರರಿಂದ ಮನವಿ ಪತ್ರ ಸ್ವೀಕರಿಸಿದರು.
ಹೋರಾಟ ಸಮಿತಿಯ ಮುಖಂಡರಾದ ವಿಜಯ ಪೂಜೇರಿ, ಸೀತಪ್ಪ ಗಣಿ, ಉಮೇಶ ವಾಲೀಕಾರ, ಬಸವರಾಜ ಬಾಗೇವಾಡಿ, ವೆಂಕಟೇಶ ಬಂಡಿವಡ್ಡರ, ಬಾಲಪ್ಪಗೌಡ ಲಿಂಗದಳ್ಳಿ, ನಿಂಗರಾಜ ಆಲೂರ, ಸಿದ್ರಾಮ ರಂಜಣಗಿ,ಶಾರದಾ ಕಾಳಣ್ಣವರ, ಸುಜಾತಾ ಬಂಡಿವಡ್ಡರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.