ವಿಜಯಪುರ: ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ದೇಶ, ವಿದೇಶದ ಪ್ರವಾಸಿಗರನ್ನು ಇನ್ನಷ್ಟು ಆಕರ್ಷಿಸಲುಪ್ರವಾಸೋದ್ಯಮ ಇಲಾಖೆ ಆದ್ಯತೆ ನೀಡಬೇಕು ಎಂದು ವಿಜಯಪುರ ಆಕಾಶವಾಣಿ ಕಾರ್ಯಕ್ರಮ ಅಧಿಕಾರಿ ಸೋಮಶೇಖರ್ ರೊಳ್ಳಿ ಹೇಳಿದರು.
ನಗರದ ಸಂಗೀತ ಮಹಲ್ನಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರವಾಸೋದ್ಯಮ ಇಲಾಖೆಯು ರೂಪಿಸುವ ಅನೇಕ ಯೋಜನೆಗಳು ಮುಂಬರುವ ದಿನಗಳಲ್ಲಿ ಯಶಸ್ಸು ಕಾಣುವಂತಾಗಲಿ. ಅದಕ್ಕೆ ನಾವೆಲ್ಲರೂ ಸಹಕರಿಸೋಣ ಎಂದರು.
ಮಕ್ಕಳಿಗೆ ಸ್ಮಾರಕಗಳ ಬಗ್ಗೆ ತಿಳಿ ಹೇಳುವುದರ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದ ಅವಕಾಶಗಳ ಮಹತ್ವ ತಿಳಿಸಿಕೊಡಬೇಕು ಎಂದು ಅವರು ಹೇಳಿದರು.
ಆಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತ ಗ್ರಾಮೀಣ ಮತ್ತು ಸಮುದಾಯ ಆಧಾರಿತ ಪ್ರವಾಸೋದ್ಯಮವನ್ನು ವಿಷಯವಾಗಿ ಗುರುತಿಸಿ, ರಾಷ್ಟ್ರೀಯ ಪ್ರವಾಸೋದ್ಯಮ ದಿನ ಎಂದು ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಡಾ.ರಮೇಶ ಕಾಂಬಳೆ ಮಾತನಾಡಿ, ವಿಜಯಪುರ ಜಿಲ್ಲೆಯು ಪ್ರವಾಸಿ ತಾಣಗಳಿಗೆ ಹೆಸರು ವಾಸಿಯಾಗಿದ್ದು, ಇದರಲ್ಲಿ ನವರಸಪುರಕ್ಕೆ ವಿಶೇಷ ಮಹತ್ವ ಇದೆ ಎಂದರು.
ಪ್ರವಾಸೋದ್ಯಮ ಇಲಾಖೆಯಿಂದ ಗ್ರಾಮೀಣ ಮಟ್ಟದಲ್ಲಿ, ಸಮುದಾಯಗಳಿಗೆ ಉದ್ಯೋಗಾವಕಾಶ ದೊರಕಿಸಿಕೊಡುವಂತಾಗಬೇಕು ಎಂದು ಅವರು ಸಲಹೆ ನೀಡಿದರು.
ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ರಸಪ್ರಶ್ನೆ, ಭಾಷಣ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಮಾಜ ಸೇವಕ ಪೀಟರ್ ಅಲೆಕ್ಸಾಂಡರ್, ಮುಖಂಡರಾದ ಅಡಿವೆಪ್ಪ ಸಾಲಗಲ್, ಶಂಭುಲಿಂಗ ಕರ್ಪೂರಮಠ, ಭೀಮರಾಯ ಜಿಗಜಿಣಗಿ, ಮಹೇಶ ಕ್ಯಾತನ್, ಅಂಬಾದಾಸ ಜೋಷಿ, ರಾಕೇಶ, ವರದರಾಜನ್, ನಂದಕುಮಾರ ರುದ್ರಗೌಡರ, ವಿದ್ಯಾರ್ಥಿನಿ ಅಕ್ಷತಾ ಅಂಬೂರ, ಸೋಮನಗೌಡ ಕಲ್ಲೂರ, ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.