ADVERTISEMENT

ಪಿಯು ಫಲಿತಾಂಶ ಕಡಿಮೆಯಾದರೆ ಕ್ರಮ: ಜಿಪಂ ಸಿಇಒ ರಿಷಿ ಆನಂದ್‌ ಸೂಚನೆ

ಫಲಿತಾಂಶ ಹೆಚ್ಚಳಕ್ಕೆ ಶ್ರಮವಹಿಸಲು ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2026, 5:06 IST
Last Updated 6 ಫೆಬ್ರುವರಿ 2026, 5:06 IST
ರಿಷಿ ಆನಂದ್‌
ರಿಷಿ ಆನಂದ್‌   

ವಿಜಯಪುರ: ‘ಪ್ರಸಕ್ತ ಸಾಲಿನಲ್ಲಿ ಪದವಿ ಪೂರ್ವ ಇಲಾಖೆಯಿಂದ ಮತ್ತು ಸರ್ಕಾರದಿಂದ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಬಂದಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಶೇಕಡಾ ನೂರರಷ್ಟು ಫಲಿತಾಂಶ ಸುಧಾರಣೆಗೆ ಶ್ರಮ ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಈ ಪ್ರಸಕ್ತ ಸಾಲಿನಲ್ಲಿ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಹೆಚ್ಚಿನ ಶ್ರಮವಹಿಸಬೇಕು. ಒಂದು ವೇಳೆ ಫಲಿತಾಂಶ ಕಡಿಮೆಯಾದಲ್ಲಿ ಅಂತಹ ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ADVERTISEMENT

‘ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾ, ಯುಪಿಎಸ್, ಸ್ಟೋರೇಜ್ ಡಿವೈಸ್, ಸೂಕ್ತ ಕೊಠಡಿಗಳ ವ್ಯವಸ್ಥೆ, ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿ ಮೂಲ ಸೌಲಭ್ಯಗಳ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಮಾತನಾಡಿ, ‘ಕಳೆದ ಸಾಲಿನಲ್ಲಿ ಕಡಿಮೆ ಫಲಿತಾಂಶ ಬಂದಿರುವ ಕಾಲೇಜುಗಳ ಪ್ರಾಂಶುಪಾಲರು ಈ ಬಾರಿ ನಿರೀಕ್ಷಿತ ಪ್ರಮಾಣದ ಗುರಿ ಸಾಧಿಸಬೇಕು. ಕಡಿಮೆ ಫಲಿತಾಂಶ ಇರುವ ಕಾಲೇಜುಗಳಲ್ಲಿ ಇಚ್ಛಾಶಕ್ತಿ ವಹಿಸಿ ಸುಧಾರಣೆ ಮಾಡಬೇಕು’ ಎಂದರು.

‘ಫಲಿತಾಂಶ ಒಂದೇ ರೀತಿಯಾಗಿರಬೇಕು. ಮಕ್ಕಳಲ್ಲಿರುವ ಪರೀಕ್ಷಾ ಭಯ ಹೋಗಲಾಡಿಸಿ, ಬದಲಾವಣೆ ಮಾಡಿ, ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಬೇಕು, ವಿದ್ಯಾರ್ಥಿಗಳಿಗೆ ನುರಿತ ವಿಷಯ ತಜ್ಞರಿಂದ ವಿಶೇಷ ತರಗತಿಗಳನ್ನು ನಡೆಸಬೇಕು’ ಎಂದು ಸೂಚಿಸಿದರು.

ಉಪ ನಿರ್ದೇಶಕ ಸಿ.ಕೆ. ಚಂದ್ರಶೇಖರ ಹೊಸಮನಿ ಅವರು ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳ ಕುರಿತು ಸಭೆಗೆ ವಿವರಿಸಿದರು.

ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರಿಗೆ ವಿಷಯವಾರು ಕಾರ್ಯಾಗಾರ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿ ಸೇರಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ‌ ನಿಗದಿತ ಗುರಿಯಂತೆ ಉತ್ತಮ ಪ್ರಗತಿ ಸಾಧಿಸುವುದಾಗಿ ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲನೆ ಮಾಡಲು ಸಮಿತಿ ರಚಿಸಿದ್ದು, ಆ ಸಮಿತಿಯ ಮೂಲಕ ಮೂಲ ಸೌಕರ್ಯಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.