ವಿಜಯಪುರ: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ625ಕ್ಕೆ 625 ಅಂಕಗಳಿಸಿದ ಜಿಲ್ಲೆಯ ವಿವಿಧ ಪ್ರೌಢಶಾಲೆಗಳ ಏಳು ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯ್ತಿಯಿಂದ ಸನ್ಮಾನಿಸಲಾಯಿತು.
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿಸಾಧಕ ವಿದ್ಯಾರ್ಥಿಗಳಾದ ಜುಮನಾಳ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಮಿತ್ ಮಾದರ, ಕಾರಜೋಳ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ಐಶ್ವರ್ಯಾ ಕಣಸೆ ಮತ್ತು ಸ್ವಾತಿ ಮಾಳೇದ, ತುಂಗಳ ಪ್ರೌಢಶಾಲೆಯ ರಕ್ಷಿತ ಚಿನಿವಾರ, ತಾಳಿಕೋಟೆ ಸರ್ವಜ್ಞ ವಿದ್ಯಾಪೀಠದ ವಿದ್ಯಾರ್ಥಿನಿ ಶ್ರೇಯಾ ದೇಸಾಯಿ, ಮುದ್ದೇಬಿಹಾಳದ ನಾಗರಬೆಟ್ಟ ಆಕ್ಸ್ಫರ್ಡ್ ಪ್ರೌಢಶಾಲೆಯ ವಿದ್ಯಾರ್ಥಿ ಯಲ್ಲಾಲಿಂಗ ಸೂಳಿಬಾವಿ, ಸಿಂದಗಿಯ ಕಿತ್ತೂರ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಯ ಶಿವಲೀಲಾ ದುರ್ಗೆ ಹಾಗೂ ಅವರ ಪಾಲಕರು ಮತ್ತು ಶಿಕ್ಷಕರಿಗೂ ಸನ್ಮಾನಿಸಿರುವುದು ವಿಶೇಷವಾಗಿತ್ತು.
ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಗುಣಾತ್ಮಕ ಫಲಿತಾಂಶದಲ್ಲಿ ಜಿಲ್ಲೆಯು ಅತ್ಯುನ್ನತ ಸ್ಥಾನಗಳಿಸಿದೆ. ಹಿಂದಿನ ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಡಿಡಿಪಿಐ, ಬಿಇಓ ಹಾಗೂ ಎಲ್ಲ ಶಿಕ್ಷಕರ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದ್ದು ಅವರಿಗೂ ವಿಶೇಷ ಅಭಿನಂದನೆ ಸಲ್ಲಿಸಲಾಗುವುದು ಎಂದರು.
ಪರೀಕ್ಷೆಯ ಪ್ರತಿ ಹಂತದಲ್ಲೂ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮ, ಸತತ ಅಧ್ಯಯನ, ಪಾಲಕರ ಪ್ರೋತ್ಸಾಹ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಗ್ರಾಮೀಣ ಪ್ರದೇಶದ ಹಿನ್ನೆಲೆ, ಬಡತನ ಎಲ್ಲವನ್ನೂ ಮೀರಿ ವಿದ್ಯಾರ್ಥಿಗಳು ಈ ಸಾಧನೆ ಮಾಡಿರುವುದು ಅತ್ಯಂತ ಶ್ಲಾಘನೀಯ ಎಂದರು.
ಇಂತಹದೊಂದು ದೊಡ್ಡ ಸಾಧನೆ ಮಾಡಿದ ವಿದ್ಯಾರ್ಥಿಗಳು ಇದನ್ನು ತಮ್ಮ ತಲೆಗೇರಿಸಿಕೊಳ್ಳಬಾರದು. ಎಸ್.ಎಸ್.ಎಲ್.ಸಿ ಒಂದು ಹಂತವಷ್ಟೇ, ಮುಂದೆಯೂ ಇನ್ನಷ್ಟು ಕಠಿಣ ಪರಿಶ್ರಮಪಟ್ಟು ಭವಿಷ್ಯದಲ್ಲಿ ಉನ್ನತ ಗುರಿ ಸಾಧಿಸುವಂತಾಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ನಿಲ್ಲಿಸಬಾರದು. ಸರ್ಕಾರದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಹಾಸ್ಟೇಲ್, ಸ್ಕಾಲರ್ಶಿಪ್ಗಳಂತಹ ಅನೇಕ ಯೋಜನೆಗಳಿದ್ದು, ಅವುಗಳನ್ನು ಸದುಪಯೋಗಪಡೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ವಿದ್ಯಾರ್ಥಿಗಳಿಗೆ ಯಾವ ವಿಷಯದಲ್ಲಿ ಆಸಕ್ತಿ ಇದೆಯೋ ಅದರಲ್ಲೇ ಮುಂದುವರೆಯಲು ಪಾಲಕರು ಪ್ರೋತ್ಸಾಹ ನೀಡಬೇಕು. ಅವರ ಮೇಲೆ ಅನಗತ್ಯ ಒತ್ತಡ ಹೇರಬಾರದು. ಆಸಕ್ತಿ ಇದ್ದ ವಿಷಯದಲ್ಲಿ ಮಾತ್ರ ವಿದ್ಯಾರ್ಥಿಗಳು ಮಹತ್ತರವಾದ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಒಂದು ಆರಂಭಿಕ ಹಂತ. ಆದರೆ, ಜೀವನ ಪಯಣ ದೊಡ್ಡದಾಗಿದೆ. ಈ ದಾರಿಯಲ್ಲಿ ಸಾಗುವಾಗ ಯಾವುದೇ ರೀತಿಯ ಸವಾಲು ಎದುರಾದರೂ ಆತ್ಮವಿಶ್ವಾಸ ಕಳೆದುಕೊಳ್ಳದೇ ಮುನ್ನಡೆಯಬೇಕು ಎಂದು ಹೇಳಿದರು.
ಪರೀಕ್ಷೆಗಳಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಬುದ್ಧಿವಂತರಲ್ಲ ಎಂಬ ಭಾವನೆ ತಪ್ಪು, ಅವರು ಇನ್ನಷ್ಟು ಪರಿಶ್ರಮ ಪಟ್ಟರೆ ತೇರ್ಗಡೆ ಹೊಂದಬಹುದು. ಅಲ್ಲದೇ, ಬೇರೆ ಬೇರೆ ಕ್ಷೇತ್ರಗಳಲ್ಲಿಯೂ ಅವರು ಉತ್ತಮ ಸಾಧನೆ ಮಾಡಬಹುದು. ಇದಕ್ಕೆ ಪಾಲಕರ ಹಾಗೂ ಶಿಕ್ಷಕರ ಸೂಕ್ತ ಮಾರ್ಗದರ್ಶನವೂ ಅಗತ್ಯ. ತಮ್ಮೊಂದಿಗೆ ಓದುತ್ತಿದ್ದ ಅದೆಷ್ಟೋ ಸ್ನೇಹಿತರು ಇಂದು ವ್ಯಾಪಾರೋದ್ಯಮಗಳಲ್ಲಿ ಗಣೀಯ ಸಾಧನೆ ಮಾಡಿದ್ದಾರೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ಮುಂದೆ ಐಎಎಸ್ ನಂತಹ ಸಿವಿಲ್ ಸರ್ವೀಸ್ ಹಾಗೂ ಐಐಟಿಗಳಲ್ಲಿ ಓದಲು ಉತ್ಸುಕರಾಗಿರುವುದು ಬಹಳ ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ವಿ.ಹೊಸೂರ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಅಭೂತಪೂರ್ವ ಸಾಧನೆಯ ಮೂಲಕ ಜಿಲ್ಲೆಯು ರಾಜ್ಯದ ಗಮನ ಸೆಳೆದಿದೆ. ಜಿಲ್ಲೆಯ ವಿದ್ಯಾರ್ಥಿಗಳು ತಮ್ಮ ಈ ಸಾಧನೆಯ ಮೂಲಕ ತವರಿಗೆ ಕೀರ್ತಿ ತಂದಿದ್ದಾರೆ. ಗುಣಾತ್ಮಕ ಶಿಕ್ಷಣದತ್ತ ಜಿಲ್ಲೆ ದಾಪುಗಾಲಿಡುತ್ತಿದೆ. ಜಿಲ್ಲೆ ಶೈಕ್ಷಣಿಕವಾಗಿ ಮುಂದೆ ಸಾಗುತ್ತಿದ್ದು, ಈ ವಿಷಯದಲ್ಲಿ ಶಿಕ್ಷಕರ ಶ್ರಮವೂ ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸುರೇಶ ಶೆಡಶ್ಯಾಳ ಉಪಸ್ಥಿತರಿದ್ದರು.
****
ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯಿಂದ ವಿಜಯಪುರ ಹೊರಬಂದಂತಾಗಿದೆ. ಮುಂದಿನ ದಿನಗಳಲ್ಲಿಯೂ ಇದನ್ನು ಕಾಪಾಡಿಕೊಂಡು, ಇನ್ನಷ್ಟು ಒಳ್ಳೆಯ ಫಲಿತಾಂಶ ತರಲು ಪ್ರಯತ್ನಿಸಲಾಗುವುದು
–ವಿಜಯಮಹಾಂತೇಶ,ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.