ADVERTISEMENT

ಬಸವ ಜನ್ಮಸ್ಥಳ ಅಭಿವೃದ್ಧಿ ಅನುದಾನಕ್ಕೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ: ಖಂಡ್ರೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2024, 15:44 IST
Last Updated 30 ಆಗಸ್ಟ್ 2024, 15:44 IST
ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನದಲ್ಲಿ ಸಂಸದ ಸಾಗರ ಖಂಡ್ರೆ ಅವರನ್ನು ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಸನ್ಮಾನಿಸಲಾಯಿತು
ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನದಲ್ಲಿ ಸಂಸದ ಸಾಗರ ಖಂಡ್ರೆ ಅವರನ್ನು ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಸನ್ಮಾನಿಸಲಾಯಿತು   

ಬಸವನಬಾಗೇವಾಡಿ: ‘ಬಸವಕಲ್ಯಾಣ ಅನುಭವ ಮಂಟಪಕ್ಕೆ ಅನುದಾನ ನೀಡಿದಂತೆ ಬಸವ ಜನ್ಮಸ್ಥಳ ಬಸವನಬಾಗೇವಾಡಿಯ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ ನೀಡುವಂತೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ’ ಎಂದು ಬೀದರ ಸಂಸದ ಸಾಗರ ಖಂಡ್ರೆ ಹೇಳಿದರು.

ಪಟ್ಟಣದ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನ, ಬಸವಜನ್ಮ ಸ್ಮಾರಕಕ್ಕೆ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಈ ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಸಮಾಲೋಚನೆ ಮಾಡಿ ಇಲ್ಲಿ ಕೈಗೊಳ್ಳಬೇಕಾದ ಕಾರ್ಯಗಳಿಗೆ ಬೇಕಾದ ಅನುದಾನ ಕುರಿತು ಚರ್ಚಿಸಿ ಸಂಸತ್ತಿನಲ್ಲಿ ಇದರ ಬಗ್ಗೆ ಚರ್ಚಿಸುತ್ತೇನೆ.  ತೆಲಗಿಯ ಬಸವನಬಾಗೇವಾಡಿ ರೋಡ್ ರೈಲು ನಿಲ್ದಾಣದಲ್ಲಿ ಎಲ್ಲ ರೈಲು ನಿಲುಗಡೆಯಾಗುವಂತೆ ಕೇಂದ್ರ ರೈಲು ಸಚಿವರ ಗಮನಕ್ಕೆ ತರುತ್ತೇನೆ’ ಎಂದರು.

ADVERTISEMENT

‘ಯುವಕರ ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು. ಪದವಿ ಮುಗಿಸಿದ ಯುವಕರಿಗೆ ಕೌಶಲ ತರಬೇತಿಯಂತಹ ಕಾರ್ಯಕ್ರಮಗಳನ್ನು ರೂಪಿಸಿ ಅವರಿಗೆ ಉದ್ಯೋಗ ಸಿಗುವಂತೆ ಮಾಡಲಾಗುವುದು.  ನಮ್ಮ ಭಾಗದಲ್ಲಿ ರೈತರಿಗೆ ಪ್ರಧಾನಿ ಫಸಲು ವಿಮಾ ಯೋಜನೆಯಡಿ ವಿಮಾ ಹಣ ಜಮಾ ಆಗಿಲ್ಲ. ಈ ಕುರಿತು ಕೇಂದ್ರ   ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದು ಹೇಳಿದರು.

ನಂದಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸತ್ಯಜೀತ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವರಾಜ ಹಾರಿವಾಳ, ಬಸವರಾಜ ರಾಯಗೊಂಡ, ಸಂಗಮೇಶ ಓಲೇಕಾರ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.