ADVERTISEMENT

ಕೋವಿಡ್ ಮೂರನೇ ಅಲೆ: ಮಕ್ಕಳ ತುರ್ತು ಚಿಕಿತ್ಸೆಗೆ ಸಿದ್ಧತೆ ಪರಿಶೀಲನೆ

ವೈದ್ಯರು, ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸಭೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 11:39 IST
Last Updated 2 ಜೂನ್ 2021, 11:39 IST
ವಿಜಯಪುರ ನಗರದ ಬಿದರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಕೋವಿಡ್‌ ಚಿಕಿತ್ಸೆ ಕುರಿತು ಪರಿಶೀಲಿಸಿದರು
ವಿಜಯಪುರ ನಗರದ ಬಿದರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಕೋವಿಡ್‌ ಚಿಕಿತ್ಸೆ ಕುರಿತು ಪರಿಶೀಲಿಸಿದರು   

ವಿಜಯಪುರ: ಕೋವಿಡ್ ಮೂರನೇ ಅಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸೋಂಕಿಗೆ ತುತ್ತಾಗುವ ಸಾಧ್ಯತೆ ಇರುವುದರಿಂದ ಈ ಕುರಿತು ಈಗಿನಿಂದಲೇ ಅವಶ್ಯಕ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚನೆ ನೀಡಿದರು.

ನಗರದ ಬಿದರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಅಲ್ಲಿರುವ ಸೌಕರ್ಯಗಳ ಬಗ್ಗೆ ಪರಿಶೀಲಿಸಿ, ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ನಡೆದಸಭೆಯಲ್ಲಿ ಅವರು ಮಾತನಾಡಿದರು.

ಸೂಕ್ತ ವೆಂಟಿಲೇಟರ್‌, ಆಕ್ಸಿಜನ್ ಸೌಲಭ್ಯ, ಹಾಸಿಗೆಗಳ ಲಭ್ಯತೆ ಮತ್ತು ಅಂಬುಲೆನ್ಸ್ ಸೇರಿದಂತೆ ಮಕ್ಕಳ ಚಿಕಿತ್ಸಾ ಸೌಕರ್ಯದ ಬಗ್ಗೆ ಪರಿಶೀಲಿಸಿ ಅಗತ್ಯ ಸಿದ್ಧತೆಗೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಸಲಹೆ ನೀಡಿದರು.

ADVERTISEMENT

ಕೆ. ಪಿ. ಎಂ. ಇ ಕಾಯ್ದೆ ಅಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳು ಮತ್ತು ಚಿಕ್ಕಮಕ್ಕಳ ತಜ್ಞರೊಂದಿಗೂ ಸಹ ಈ ಕುರಿತು ಚರ್ಚಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸೋಂಕಿತ ಮಕ್ಕಳಿಗೆ ಸಕಾಲದಲ್ಲಿ ತುರ್ತು ಮತ್ತು ಪರಿಣಾಮಕಾರಿ ಚಿಕಿತ್ಸೆ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಮತ್ತು ವೈದ್ಯರು ಸನ್ನದ್ಧಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಸ್ಪತ್ರೆ ಸರ್ಜನ್ ಡಾ. ಶರಣಪ್ಪ ಕಟ್ಟಿ, ಡಾ.ಲಕ್ಕಣ್ಣವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪಸೆ, ಮಕ್ಕಳ ತಜ್ಞ ಎಲ್.ಎಚ್.ಬಿದರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.