ಇಂಡಿ: ಇಂಡಿ ಪಟ್ಟಣದಲ್ಲಿ ರಸ್ತೆಗಳ ಅಗಲೀಕರಣ, ತಾಲ್ಲೂಕು ಕ್ರೀಡಾಂಗಣ, ಮೆಗಾ ಮಾರುಕಟ್ಟೆ ನಿರ್ಮಿಸಲಾಗಿದೆ. ಮುಂದಿನ ದಿನಮಾನಗಳಲ್ಲಿ ಇಂಡಿ ತಾಲ್ಲೂಕನ್ನು ಜಿಲ್ಲೆಯನ್ನಾಗಿ ಪರಿವರ್ತಿಸುವ ಸಂಕಲ್ಪ ಇಟ್ಟುಕೊಂಡಿದ್ದೇನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಭರವಸೆ ನೀಡಿದರು.
ತಾಲ್ಲೂಕಿನ ಹಿಂಗಣಿ ಗ್ರಾಮಕ್ಕೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳನ್ನು ಸಾರ್ವಜನಿಕರಿಗೆ ನೀಡಿ ಮಾತನಾಡಿದರು.
ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಇದರಲ್ಲಿ ಯಾವುದೇ ಸಂದೇಹವಿಲ್ಲ. ಅಧಿಕಾರಕ್ಕೆ ಬಂದ ತಕ್ಷಣವೇ ನಿಮಗೆ ಕೊಟ್ಟಿರುವ ಗ್ಯಾರಂಟಿ ಕಾರ್ಡಿನಲ್ಲಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದರು.
ನಮ್ಮ ಅಧಿಕಾರದ ಅವಧಿಯಲ್ಲಿ ನೀಡಿದ್ದ 160 ಭರವಸೆಗಳಲ್ಲಿ ಯಾವುದನ್ನೂ ತಪ್ಪಿಸದೇ ಈಡೇರಿಸಿದ್ದೇವೆ. ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿಗೆ ಬದ್ಧತೆಯಿಂದ ನಡೆದುಕೊಳ್ಳುತ್ತದೆ ಎಂದರು.
ಇಂಡಿ ಮತಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶ್ರೀ ಭೀಮಾಶಂಕರ ಸಕ್ಕರೆ ಕಾರ್ಖಾನೆಯ ಕೆಲಸದೊಂದಿಗೆ ಮಿನಿ ವಿಧಾನ ಸೌಧ, ಪದವಿ, ಡಿಪ್ಲೋಮಾ, ಐಟಿಐ, ಪಿಯು ಕಾಲೇಜು ಮುಂತಾದ ಶೈಕ್ಷಣಿಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದು ಹೇಳಿದರು.
ಮುಖಂಡರಾದ ಸದಾಶಿವ ಪ್ಯಾಟಿ, ಇಲಿಯಾಸ್ ಬೋರಾಮಣಿ, ಜಾವೀದ ಮೋಮಿನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.