ಯುನೂಸ್ ಇಕ್ಲಾಸ್ ಪಟೇಲ್
ವಿಜಯಪುರ: ಜಿಲ್ಲೆಯ ಸಿಂದಗಿ ತಾಲ್ಲೂಕಿನ ರಾಂಪೂರ ಪಿ.ಎ. ಗ್ರಾಮದಲ್ಲಿ ಶನಿವಾರ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರ ಗುಂಡೇಟಿಗೆ ರೌಡಿ ಶೀಟರ್ ಬಲಿಯಾಗಿದ್ದಾನೆ.
ಆಲಮೇಲ ತಾಲ್ಲೂಕಿನ ದೇವಣಗಾಂವದ ರೌಡಿಶೀಟರ್ ಯುನೂಸ್ ಇಕ್ಲಾಸ್ ಪಟೇಲ್(30 )ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ವಿಜಯಪುರ ನಗರದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ₹25 ಸಾವಿರ ಹಣ ಮತ್ತು ಸ್ಕೂಟಿ ಕಿತ್ತುಕೊಂಡು ಪರಾರಿಯಾಗಿದ್ದನು. ಈ ಸಂಬಂಧ ಗಾಂಧಿ ಚೌಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದರು.
ಆರೋಪಿಯನ್ನು ಹುಡುಕಿಕೊಂಡು ಹೋದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಹೊಲವೊಂದರಲ್ಲಿ ಎಡವಿ ಬಿದ್ದಿದ್ದಾನೆ. ಆಗ ಬಂಧಿಸಲು ಮುಂದಾದ ಪೊಲೀಸರಿಗೆ ಚಾಕುವಿನಿಂದ ಇರಿಯಲು ಮುಂದಾಗಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ
ಇನ್ ಸ್ಪೆಕ್ಟರ್ ಎಚ್ಚರಿಕೆ ನೀಡಿದರೂ ಆರೋಪಿಯು ದಾಳಿ ಮಾಡಲು ಯತ್ನಿಸಿದಾಗ ಕಾಲಿಗೆ ಗುಂಡು ಹೊಡೆದಿದ್ದಾರೆ. ಈ ಗುಂಡು ಆರೋಪಿಯ ತಲೆಗೂ ಬಿದ್ದಿದೆ ಎಂದು ಅವರು ತಿಳಿಸಿದರು.
ತೀವ್ರವಾಗಿ ಗಾಯಗೊಂಡ ಆತನನ್ನು ಸಿಂದಗಿ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲೇ
ಸಾವಿಗೀಡಾಗಿರುವುದಾಗಿ ವೈದ್ಯರು ಖಚಿತ ಪಡಿಸಿದರು ಎಂದು ಹೇಳಿದರು.
ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಎರಡು ಕೊಲೆ ಕೇಸು, ಕೊಲೆ ಯತ್ನ ಕೇಸು, ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿವೆ ಎಂದರು.
ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.