
ವಿಜಯಪುರ: ‘ಎಸ್ಸಿಪಿ/ ಟಿಎಸ್ಪಿ ಸಭೆಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಖುದ್ದು ಹಾಜರಿರಬೇಕು. ಯೋಜನೆಗೆ ನಿಗದಿಪಡಿಸಿದ ಅನುದಾನ ಮರಳಿ ಹೋಗದಂತೆ ಕ್ರಿಯಾಯೋಜನೆ ರೂಪಿಸಿಕೊಂಡು ನಿಗದಿತ ಕಾಲಾವಧಿಯೊಳಗೆ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯಡಿಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದ ಯೋಜನೆಗಳಡಿ ನಿಗದಿತ ಯೋಜನೆಗಳ ಪ್ರಗತಿ ಸಾಧಿಸಲು ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು, ಅತ್ಯಂತ ಜವಾಬ್ದಾರಿಯಿಂದ ಯೋಜನೆ ಅನುಷ್ಠಾನಗೊಳಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ತಲುಪಿಸಬೇಕು’ ಎಂದರು.
ಕಾರ್ಮಿಕ ಇಲಾಖೆಯಿಂದ ಬಾಲ ಕಾರ್ಮಿಕ ನಿಷೇಧ ಪದ್ಧತಿ ವಿವಿಧ ಇಲಾಖೆಯ ಸಮನ್ವಯದೊಂದಿಗೆ ನಿರ್ವಹಿಸಿ, ಈ ಕಾಯ್ದೆ ಬಗ್ಗೆ ವ್ಯಾಪಕ ಅರಿವು– ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಬಗ್ಗೆ ಸಭೆಗೆ ಮಾಹಿತಿ ನೀಡಲಾಯಿತು.
‘ಪಶು ಸಂಗೋಪನಾ ಇಲಾಖೆಯ ಮೂಲಕ ಅನುಗ್ರಹ ಯೋಜನೆಯಡಿ ಆಕಸ್ಮಿಕವಾಗಿ ಮರಣ ಹೊಂದಿರುವ ಕುರಿ, ಮೇಕೆಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 123 ಜನರ ಖಾತೆಗೆ ₹8.5 ಲಕ್ಷ ಜಮಾ ಮಾಡಲಾಗಿದೆ. ಕಾಮಧೇನು ಆಪತ್ತು ನಿಧಿಯಿಂದ ಪರಿಶಿಷ್ಟ ಜಾತಿಯ 57 ಜನರಿಗೆ ₹5.70 ಲಕ್ಷ ಹಾಗೂ ಪರಿಶಿಷ್ಟ ಪಂಗಡದ 6 ಜನರಿಗೆ ₹60 ಸಾವಿರ ಜಾನುವಾರು ಮರಣ ಸಂದರ್ಭದಲ್ಲಿ ಪಾವತಿಸಲಾಗಿದೆ. ಏಪ್ರಿಲ್ನಿಂದ ಅಕ್ಟೋಬರ್ವರೆಗೆ 911 ಪರಿಶಿಷ್ಟ ಜಾತಿ ಹಾಗೂ 394 ಪರಿಶಿಷ್ಟ ಪಂಗಡದ ಜನರಿಗೆ ಹಾಲು ಒಕ್ಕೂಟದಿಂದ ಹಾಲು ಪ್ರೋತ್ಸಾಹ ಧನ ಪಾವತಿಸಲಾಗಿದೆ’ ಎಂದು ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಘೋಣಸಗಿ ಸಭೆಗೆ ಮಾಹಿತಿ ನೀಡಿದರು.
ತೋಟಗಾರಿಕೆ, ಮೀನುಗಾರಿಕಾ, ಪಶುಸಂಗೋಪನಾ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹೆಸ್ಕಾಂ ಹಾಗೂ ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ನವೆಂಬರ್ 2025ರ ಅಂತ್ಯದವರೆಗೆ ಸಾಧಿಸಿದ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚಹ್ವಾಣ, ಕಾರ್ಮಿಕ ಇಲಾಖೆ ಅಧಿಕಾರಿ ಉಮಾಶ್ರೀ ಕೊಳ್ಳಿ, ಅಗ್ರಣೀಯ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಸಿದ್ದಯ್ಯ. ಬಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕ್ಷಕ ಅರವಿಂದ ಲಂಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.