ADVERTISEMENT

ಸುಸೂತ್ರವಾಗಿ ಪರೀಕ್ಷೆ ನಡೆಸಿ: ರಿಷಿ ಆನಂದ್‌

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 3:24 IST
Last Updated 21 ಫೆಬ್ರುವರಿ 2026, 3:24 IST
ವಿಜಯಪುರ ನಗರದ ಸರ್ಕಾರಿ ಪಿಯು  ಕಾಲೇಜಿನ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ರಿಷಿ ಆನಂದ್‌ ಮಾತನಾಡಿದರು
ವಿಜಯಪುರ ನಗರದ ಸರ್ಕಾರಿ ಪಿಯು  ಕಾಲೇಜಿನ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ರಿಷಿ ಆನಂದ್‌ ಮಾತನಾಡಿದರು   

ವಿಜಯಪುರ: ಫೆ.28 ರಿಂದ ಮಾ.17ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ಹಾಗೂ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ರಿಷಿ ಆನಂದ್‌ ಸೂಚಿಸಿದರು.

ನಗರದ ಸರ್ಕಾರಿ ಪಿಯುಸಿ ಕಾಲೇಜಿನ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲೆಯ 13 ತಾಲ್ಲೂಕುಗಳಲ್ಲಿ ಒಟ್ಟು 64 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, 32,178 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿರುವರು. ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಮುಂಜಾಗ್ರತೆಯಿಂದ  ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

ADVERTISEMENT

ಪರೀಕ್ಷಾ ಕೇಂದ್ರ  ಮುಖ್ಯಸ್ಥರು ಪರೀಕ್ಷೆ ನಡೆಯುವ ಮುಂಚೆ ಪರೀಕ್ಷೆಗೆ ನಿಯೋಜಿತಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕೊಠಡಿಗಳ ಸುವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ದಿನಗಳಂದು ಶುದ್ದ ಕುಡಿಯುವ ನೀರು, ಶೌಚಾಲಯ, ಸರ್ಮಪಕವಾಗಿ ಬೆಳಕು ಇರುವಂತೆ ನೋಡಿಕೊಳ್ಳಬೇಕು ಹಾಗೂ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದರು.

ಸಮಿತಿ ನಿಯೋಜನೆ:

ಪರೀಕ್ಷೆಗೆ ಸಂಬಂಧಿಸಿದ ಸಾಮಗ್ರಿಗಳನ್ನು 27 ಮಾರ್ಗಾಧಿಕಾರಿಗಳ ತಂಡಕ್ಕೆ ಹಸ್ತಾಂತರಿಸಲು ಹೆಚ್ಚುವರಿ ಜಿಲ್ಲಾಧಿಕಾರಿಗಳು, ಉಪ ನಿರ್ದೇಶಕರು, ಜಿಲ್ಲಾ ಖಜಾನೆ ಮತ್ತು ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಅವರನ್ನೊಳಗೊಂಡ ಸಮಿತಿಯನ್ನು ನಿಯೋಜನೆ ಮಾಡಲಾಗಿದೆ ಎಂದರು.

ಪರೀಕ್ಷಾ ನಡೆಯುವ ದಿನಗಳಂದು  ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀಟರ್‌ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಂದೋಬಸ್ತ್‌ ಕಲ್ಪಿಸಲು ಸೂಚಿಸಿದರು.

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿ.ಸಿ.ಟಿವಿ ಕ್ಯಾಮೆರಾ ಅಳವಡಿಸಲು ಕ್ರಮ ವಹಿಸಬೇಕು ಹಾಗೂ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿರುವಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳ ಕಚೇರಿಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಿ ನಿಗಾ ವಹಿಸಲು ಕ್ರಮ ವಹಿಲಾಗುವುದು ಎಂದರು.

ಪರೀಕ್ಷೆಗೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ  ಅಚ್ಚುಕಟ್ಟಾಗಿ ಯಾವುದೇ ರೀತಿ ಲೋಪವಾಗದಂತೆ ಪರೀಕ್ಷೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಪೊಲೀಸ್ ಇಲಾಖೆ ನಿಮ್ಮೊಂದಿಗೆ ಸಹಕರಿಸುವುದಾಗಿ ಅವರು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಕಾನೂನು ಸುವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು ಯಾವುದೇ ಸಮಸ್ಯೆ ಬಾರದಂತೆ ನಿಮಗೆ ಎಲ್ಲ ರೀತಿ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ ಹೊಸಮನಿ, ಎ.ಕೆ. ಉಪ್ಪರ, ಸಿ.ಬಿ. ನಾಟಿಕಾರ, ಬಿ.ಬಿ. ಗಂಗನಹಳ್ಳಿ, ಪ್ರಕಾಶ ಮೇತ್ರಿ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.