ADVERTISEMENT

ಸಂಪುಟದಿಂದ ಕೈಬಿಡುವುದಿಲ್ಲ: ಜೊಲ್ಲೆ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 17:06 IST
Last Updated 3 ಜೂನ್ 2020, 17:06 IST
ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ   

ವಿಜಯಪುರ: ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯುರಪ್ಪ ಸಚಿವ ಸಂಪುಟದಲ್ಲಿ ಇರುವ ಏಕೈಕ ಮಹಿಳೆ ನಾನಾಗಿದ್ದು, ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಚಿವಳಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಒಂದು ವೇಳೆ ಸಂಪುಟದಿಂದ ಕೈಬಿಡುವ ತೀರ್ಮಾನ ಕೈಗೊಂಡರೂ ಪಕ್ಷದ ಸಾಮಾನ್ಯ ಕಾರ್ಯಕರ್ತಳಾಗಿ ಕೆಲಸ ಮಾಡಲು ಸಿದ್ಧಳಿದ್ದೇನೆ. ಪಕ್ಷದ ತೀರ್ಮಾನಕ್ಕೆ ಬದ್ಧಳಾಗಿದ್ದೇನೆ’ ಎಂದು ಹೇಳಿದರು.

ಉತ್ತಮ ಆಡಳಿತ: ‘ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌’ ಘೋಷಣೆಯಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆರು ವರ್ಷಗಳ ಆಡಳಿತಾವಧಿಯಲ್ಲಿ ದೇಶದಲ್ಲಿ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಹತ್ತು, ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ಶ್ಲಾಘಿಸಿದರು.

ADVERTISEMENT

ಜನಧನ್‌, ತ್ರಿವಳಿ ತಲಾಕ್‌ ರದ್ದು, ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ, ಆಯುಷ್ಮಾನ್‌ ಭಾರತ್‌, ಪ್ರಧಾನಿ ಜನೌಷಧ ಕೇಂದ್ರ, ಹೃದ್ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಸ್ಟಂಟ್ ಅಳವಡಿಕೆ, ರಾಮ ಮಂದಿರ ವಿವಾದ ಬಗೆಹರಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

ಅನಾರೋಗ್ಯದಿಂದ ಸಾಧ್ಯವಾಗಲಿಲ್ಲ: ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಲಾಕ್‌ಡೌನ್‌ ಸಂದರ್ಭದಲ್ಲಿ ಅನಾರೋಗ್ಯ ಪೀಡಿತನಾಗಿದ್ದೆ. ಅಲ್ಲದೇ, ಈ ಸಂದರ್ಭದಲ್ಲಿ ಹೊರಗೆ ಅಡ್ಡಾಡದಂತೆ ವೈದ್ಯರು ಸಲಹೆ ನೀಡಿದ್ದ ಕಾರಣ ಸಂಕಷ್ಟದ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಯಾವುದೇ ನೆರವು ನೀಡಲು ಸಾಧ್ಯವಾಗಲಿಲ್ಲ. ನೆರವು ನೀಡಲು ನನ್ನ ಬಳಿ ಹಣವಿವೂ ಇರಲಿಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಶೀಘ್ರದಲ್ಲೇ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.

ಶಾಸಕ ಸೋಮಗೌಡ ಪಾಟೀಲ ಸಾಸನೂರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಎಸ್‌.ಪಾಟೀಲ ಕೂಚಬಾಳ, ಮುಖಂಡರಾದ ವಿಜುಗೌಡ ಪಾಟೀಲ, ಸುರೇಶ ಬಿರಾದಾರ, ವಿಜಯ ಜೋಶಿ, ಚಂದ್ರಶೇಖರ ಕವಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.