ಸೋಲಾಪುರದಲ್ಲಿ ಕರ್ನಾಟಕದ ಬಸ್ ತಡೆದು ಶಿವಸೇನೆ ಕಾರ್ಯಕರ್ತರ ಪುಂಡಾಟ
ವಿಜಯಪುರ: ಮಹಾರಾಷ್ಟ್ರ ರಾಜ್ಯದ ಸೋಲಾಪುರ ನಗರದ ಸಾಥ್ ರಸ್ತೆಯಲ್ಲಿ ಸೋಮವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಇಳಕಲ್–ಸೋಲಾಪುರ ನಗರಗಳ ನಡುವೆ ಸಂಚರಿಸುವ ಬಸ್ (ಕೆಎ 29 ಎಫ್ 1350) ಅನ್ನು ತಡೆದ ಶಿವಸೇನೆ (ಉದ್ಧವ್ ಠಾಕರೆ) ಬಣದ 15 ರಿಂದ 20 ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ.
ಚಾಲಕನನ್ನು ಬಸ್ಸಿನಿಂದ ಕೆಳಗೆ ಇಳಿಸಿ, ಮುಖಕ್ಕೆ ಕೇಸರಿ ಬಣ್ಣ ಬಳಿದು ಜೈ ಮಹಾರಾಷ್ಟ್ರ ಎಂದು ಘೋಷಣೆ ಹೇಳಿಸಿದ್ದಾರೆ. ಅಲ್ಲದೇ, ಛತ್ರಪತಿ ಶಿವಾಜಿ ಮಹಾರಾಜ್ ಕಿ ಜೈ, ಜೈ ಮಹಾರಾಷ್ಟ್ರ, ಜೈ ಭವಾನಿ ಎಂದು ಬಸ್ಸಿನ ಮೇಲೆ ಬರೆದು, ಘೋಷಣೆ ಕೂಗಿದ್ದಾರೆ.
ಈ ಸಂದರ್ಭದಲ್ಲಿ ಬಸ್ಸಿನಲ್ಲಿ ಸುಮಾರು 35 ಪ್ರಯಾಣಿಕರು ಇದ್ದರು. ಪುಂಡಾಟ ಬಳಿಕ ಬಸ್ಸನ್ನು ಬಿಟ್ಟು ಕಳುಹಿಸಿದ್ದಾರೆ. ಸ್ಥಳಕ್ಕೆ ಸದರ್ ಬಜಾರ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.