
ವಿಜಯಪುರ: ಶಿವಾಜಿ ಮಹಾರಾಜರ ಧೈರ್ಯ, ಶೌರ್ಯ ಹಾಗೂ ಪರಾಕ್ರಮ, ಸಾಹಸಗಳನ್ನು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಹೇಳಿದರು.
ನಗರದ ಕಂದಗಲ್ ಹನಮಂತ್ರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶತ್ರುಗಳು ಎಷ್ಟೆ ಬಲಿಷ್ಠವಾಗಿದ್ದರು ಅವರನ್ನು ಎದೆಗುಂದದೆ ಎದುರಿಸಿ ಗೆಲ್ಲುವ ಶಕ್ತಿ ನಮ್ಮಲ್ಲಿ ಇರಬೇಕು. ಮಹಿಳೆಯರಿಗೆ ಅಪಾರವಾದ ಗೌರವದಿಂದ ಕಾಣುತ್ತಿದ್ದ ಅವರು ನಮ್ಮ ದೇಶಕ್ಕೆ ನಿಜವಾದ ಸ್ವರಾಜ್ಯವನ್ನು ತಂದುಕೊಟ್ಟು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅಡಿಪಾಯ ಹಾಕಿಕೊಟ್ಟ ಅವರ ಸಾಹಸಗಾಥೆ ಎಲ್ಲರೂ ಸ್ಮರಿಸಬೇಕು ಎಂದು ಹೇಳಿದರು.
ಉಪನ್ಯಾಸ ನೀಡಿದ ವಿ.ಬಿ.ದರ್ಬಾರ್ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಕಾಶಿನಾಥ ಕೋಣೇನವರ, ಎಳೆಯ ವಯಸ್ಸಿನಿಂದಲೇ ತಾಯಿ ಜೀಜಾಬಾಯಿ ಅವರಿಂದ ಜೀವನ ಮೌಲ್ಯಗಳ ಶಿಕ್ಷಣ ಪಡೆದಿದ್ದ ಶಿವಾಜಿ ಸಂತ ರಾಮದಾಸರ ಪರಮಭಕ್ತರಾಗಿದ್ದರು ಎಂದರು.
ದಾದಾಜಿ ಕೊಂಡದೇವ ಅವರಿಂದ ಪರಿಪೂರ್ಣ ಸೈನಿಕ ಶಿಕ್ಷಣ ಪಡೆದಿದ್ದ ಶಿವಾಜಿ ಕಾಡುಮೇಡುಗಳಲ್ಲಿ ಸುತ್ತಾಡಿ ಅನುಭವ ಪಡೆದರು. ಪಶ್ಚಿಮ ಘಟ್ಟಗಳ ಮಾವಳರೆಂಬ ಗಿರಿಜನರನ್ನು ಕಂಡ ಶಿವಾಜಿ ಅವರ ಧೈರ್ಯ ಸಾಹಸಗಳನ್ನು ನೋಡಿ ಅವರನ್ನೆಲ್ಲಾ ಸೇರಿಸಿ ಬಲವಾದ ಪಡೆ ಕಟ್ಟಲು ಆರಂಭಿಸಿದರು ಎಂದರು.
ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿದೇಶಕ ಸಂತೋಷ ಬೋವಿ ಇದ್ದರು.
ಮೆರವಣಿಗೆ:
ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾನಗರ ಪಾಲಿಕೆ ಮೇಯರ್ ಸಿದ್ರಾಮಪ್ಪ ಕರಡಿ ಅವರು ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಡಾ. ಆನಂದ ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ್ ಜಾಧವ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ವಿಜಯಕುಮಾರ ಚವ್ಹಾಣ, ಅಡಿವೆಪ್ಪ ಸಾಲಗಲ್ಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.