ADVERTISEMENT

ಶನಿ‌ಕಾಟ ಎದುರಾಗಿರುವುದರಿಂದ ಸಿದ್ದರಾಮಯ್ಯ ರೈತರಿಗೆ ಕಾಟ ನೀಡುತ್ತಿದ್ದಾರೆ: ಅಶೋಕ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 13:55 IST
Last Updated 4 ಅಕ್ಟೋಬರ್ 2025, 13:55 IST
<div class="paragraphs"><p>ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ,&nbsp;ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ

   

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನವೆಂಬರ್‌ಗೆ ಶನಿಕಾಟ ಎದುರಾಗಿದೆ. ಒಂದು ಕಡೆ ಡಿಕೆಶಿ‌ ಕಾಟ, ಇನ್ನೊಂದು ಕಡೆ ಪರಮೇಶ್ವರ ‌ಕಾಟ, ಮತ್ತೊಂದು ಕಡೆ ಎಂ.ಬಿ. ಪಾಟೀಲ ಕಾಟ ಹೆಚ್ಚಾಗಿದೆ. ಹೀಗಾಗಿ ಮುಖ್ಯಮಂತ್ರಿ ರೈತರಿಗೆ ಕಾಟ ನೀಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ವ್ಯಂಗ್ಯವಾಡಿದರು.

ಭೀಮಾ ನದಿಯಿಂದ ಪ್ರವಾಹಕ್ಕೆ ತುತ್ತಾಗಿರುವ ವಿಜಯಪುರ ಜಿಲ್ಲೆಯ ಇಂಡಿ, ಆಲಮೇಲ ತಾಲ್ಲೂಕಿನ ರೈತರ ಹೊಲಗಳಿಗೆ ಶನಿವಾರ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ADVERTISEMENT

ಕೇಂದ್ರದ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸಲಹೆ

ರಾಜ್ಯದಲ್ಲಿ ಮಳೆ, ಪ್ರವಾಹಕ್ಕೆ ತುತ್ತಾಗಿರುವ ರೈತರಿಗೆ ಸೂಕ್ತ ಪರಿಹಾರ, ನೆರವು ಕಲ್ಪಿಸಲು ಕೇಂದ್ರ ಸರ್ಕಾರದ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ರಾಜ್ಯ ಸರ್ಕಾರ ಶೀಘ್ರ ಮುಂದಾಗಬೇಕು ಎಂದು ಹೇಳಿದರು.

ಬಿಜೆಪಿ ಪ್ರವಾಹ ವೀಕ್ಷಣೆ ವರದಿಯನ್ನು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ನೀಡಲಿದೆ. ನೆರೆ ಹಾನಿ ಸಂಬಂಧ ಚರ್ಚಿಸಲು ಶೀಘ್ರ ಸರ್ವ ಪಕ್ಷ ಸಭೆ ಕರೆಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿ ಕುರಿತು ಕೇಂದ್ರ ಸರ್ಕಾರಕ್ಕೆ ಇದುವರೆಗೂ ರಾಜ್ಯ ಸರ್ಕಾರ ಗಮನಕ್ಕೆ ತಂದಿಲ್ಲ, ಕೇವಲ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಮುಖ್ಯಮಂತ್ರಿ, ಸಚಿವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಉತ್ತರ ‌ಕರ್ನಾಟಕ ಹಾಗೂ ಮಲೆನಾಡಿನಲ್ಲಿ‌ ಪ್ರವಾಹ, ಮಳೆ ಹಾನಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ, ಯಾರೊಬ್ಬರೂ ನವರಾತ್ರಿ ಆಚರಿಸಿಲ್ಲ, ರಾಜ್ಯ ಸರ್ಕಾರ ಕುಂಭ ಕರ್ಣ ನಿದ್ದೆಯಲ್ಲಿದೆ. ಸಚಿವರು ಪ್ರವಾಹ ಸ್ಥಳಕ್ಕೆ ಭೇಟಿ ನೀಡಿಲ್ಲ, ಸಚಿವರು ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಎರಡು ತಂಡಗಳಲ್ಲಿ ಪ್ರವಾಸ ಮಾಡುವ ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಕಾಟಾಚಾರಕ್ಕೆ ಎಂಬಂತೆ ವೈಮಾನಿಕ ‌ಸಮೀಕ್ಷೆ ಮಾಡಿದ್ದಾರೆ ಎಂದು ದೂರಿದರು.

ಸರ್ಕಾರ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದೆ. ಆದರೆ, ಇದುವರೆಗೂ ನಯಾ ಪೈಸೆ ಪರಿಹಾರ ನೀಡಿಲ್ಲ, ಈ ಹಿಂದೆ ಯಡಿಯೂರಪ್ಪ, ‌ಬೊಮ್ಮಾಯಿ ಸರ್ಕಾರ ಇದ್ದಾಗ ತುರ್ತು ಪರಿಹಾರ ನೀಡಿದ್ದೆವು, ಎಕರೆಗೆ ₹25 ಸಾವಿರ ಪರಿಹಾರ ನೀಡಲಾಗಿತ್ತು, ಮಳೆ‌, ಪ್ರವಾಹದಿಂದ ಬಿದ್ದ ಮನೆಗಳಿಗೆ ₹5 ಲಕ್ಷ‌ ನೀಡಿದ್ದೇವೆ. ರಾಜ್ಯ ಸರ್ಕಾರ ಬದುಕಿದ್ದರೆ ಸರಿಯಾದ ಪರಿಹಾರ ನೀಡಲಿ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.