ವಿಜಯಪುರ: 'ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ, ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರದ ಸಾಧನೆ ಮತ್ತು ಬಿಜೆಪಿ ಸರ್ಕಾರದ ಸಾಧನೆ ಕುರಿತು ಸಾರ್ವಜನಿಕವಾಗಿ ದಾಖಲೆ ಸಮೇತ ಚರ್ಚೆ ನಡೆಸೋಣ. ಜನರೇ ತೀರ್ಮಾನಿಸಲಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ₹4559 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರದಲ್ಲಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನು ಕೈಯಲ್ಲಿ ಹಿಡಿದು ನೋಡಿ ಎಂದರು.
ಬಿಜೆಪಿ-ಜೆಡಿಎಸ್ ಇಬ್ಬರೂ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ, ಅಭಿವೃದ್ಧಿ ನಿಂತು ಹೋಗಿದೆ ಎಂದು ರಾಜಕೀಯ ಕಾರಣಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ. ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ವಿರೋಧಿಗಳ ಅಪಪ್ರಚಾರಕ್ಕೆ ಜನ ಕಲ್ಯಾಣ ಕಾರ್ಯಕ್ರಮಗಳ ಮೂಲಕವೇ ಉತ್ತರ ಕೊಡುತ್ತಿದ್ದೇವೆ. ಬರದ ನಾಡಾಗಿದ್ದ ವಿಜಯಪುರವನ್ನು ಹಸಿರು ನಾಡು ಮಾಡಿದ್ದು ನಾವು ಎಂದು ಹೇಳಿದರು.
ಹಿಂದೆ ಬರಗಾಲ ಬಂದಾಗ ಜನ ನಿಂಬೆ ಗಿಡ ಕಿತ್ತು ಹಾಕುತ್ತಿದ್ದರು. ಅದೇ ದಿನ ನಾನು ಇಂಡಿಗೆ ಬಂದಿದ್ದೆ. ನಿಂಬೆ ಬೆಳೆಗಾರರಿಗೆ ಭರವಸೆ ನೀಡಿದ್ದೆ. ನಿಂಬೆ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿ, ಇದೀಗ ಲಾಂಛನ ಬಿಡುಗಡೆ ಮಾಡಿ ನುಡಿದಂತೆ ನಡೆಯುವ ಕಾಂಗ್ರೆಸ್ಸಿನ ಪರಂಪರೆಯನ್ನು ಮುಂದುವರೆಸಿದ್ದೇವೆ ಎಂದರು.
500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವುದು, 1.23 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಹಣ ಪಡೆದಿರುವುದು, 1.64 ಕೋಟಿ ಮನೆಗಳಿಗೆ ಉಚಿತವಾಗಿ 200 ಯೂನಿಟ್ ಹಣ ಪಡೆಯುತ್ತಿರುವುದು, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳ ಮೂಲಕ ಕೋಟಿ ಕೋಟಿ ಕನ್ನಡಿಗರ ಬದುಕಿಗೆ ನೆರವಾಗಿರುವುದು ಅಭಿವೃದ್ಧಿ ಅಲ್ಲವೇ ? ಎಂದು ಪ್ರಶ್ನಿಸಿದರು.
ಗ್ಯಾರಂಟಿ ಯೋಜನೆ ಗಳಿಗೆ ಪ್ರತಿ ವರ್ಷ ₹53 ಸಾವಿರ ಕೋಟಿ ವಿನಿಯೋಗಿಸುತ್ತಿದ್ದೇವೆ. ₹ 83 ಸಾವಿರ ಕೋಟಿ ಹಣವನ್ನು ಇತರೆ ಅಭಿವೃದ್ಧಿಗೆ ತೆಗೆದಿಟ್ಟುರುವುದು ನಮ್ಮ ಅಭಿವೃದ್ಧಿಪರವಾದ ಆಡಳಿತಕ್ಕೆ ಸ್ಪಷ್ಟ ನಿದರ್ಶನ ಎಂದರು.
ಬಿಜೆಪಿ-ಜೆಡಿಎಸ್ನ ಸುಳ್ಳು ಆರೋಪಗಳನ್ನು ನಂಬಬೇಡಿ. ನಿಮ್ಮ ಕಣ್ಣೆದುರಿಗೇ ಇರುವ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರ ಮುಖಕ್ಕೆ ಹಿಡಿದು ಉತ್ತರಿಸಿ ಎಂದರು.
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸರ್ಕಾರದಿಂದ ಹಣ ತಂದು ಕ್ಷೇತ್ರದ ಅಭಿವೃದ್ಧಿ ಮಾಡುವುದು ಹೇಗೆ ಎನ್ನುವುದರಲ್ಲಿ ಬಹಳ ಪ್ರಾಮಾಣಿಕರು ಮತ್ತು ಚಾಣಾಕ್ಷರು. ನಮ್ಮದು ಸರ್ವರ ಅಭಿವೃದ್ಧಿಗೆ ಬದ್ದವಾಗಿರುವ ಸರ್ಕಾರ ಎಂದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಶಿವಾನಂದ ಎಸ್.ಪಾಟೀಲ್, ಶರಣ ಪ್ರಕಾಶ ಪಾಟೀಲ, ಶಾಸಕ ಯಶವಂತ ರಾಯಗೌಡ ಪಾಟೀಲ,ಅಶೋಕ ಮನಗೂಳಿ, ವಿಠಲ ಕಟಕದೊಂಡ, ಹಂಪನಗೌಡ ಬಾದರ್ಲಿ, ಎಂ.ವೈ.ಪಾಟೀಲ, ವಿಧಾನ ಪರಿಷತ್ ಸದಸ್ಯ ಸುನೀಲ ಗೌಡ ಪಾಟೀಲ, ಮಾಜಿ ಶಾಸಕ ಪ್ರೊ. ರಾಜು ಅಲಗೂರ, ಶರಣಪ್ಪ ಸುಣಗಾರ, ಮಕಬುಲ್ ಬಾಗವಾನ್, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸದ ಬೋರಮಣಿ, ಹಮೀದ್ ಮುಶ್ರಫ್,ಪುರಸಭೆ ಅಧ್ಯಕ್ಷ ನಿಂಬಾಜಿ ರಾಠೋಡ, ಜಿಲ್ಲಾಧಿಕಾರಿ ಡಾ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯ್ತಿ ಸಿಇಒ ರಿಷಿ ಆನಂದ, ಐಜಿಪಿ ಚೇತನ್ ಸಿಂಗ್ ರಾಠೋಡ ಉಪಸ್ಥಿತರಿಸ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.