ADVERTISEMENT

ಸಿಂದಗಿ ಉಪ ಚುನಾವಣಾ ಕಣ: ರಾಜಕೀಯ ‘ವ್ಯೂಹ’ ಬದಲಿಸಿದ ಕಾಂಗ್ರೆಸ್

ಸಿಂದಗಿ ಉಪ ಚುನಾವಣಾ ಕಣಕ್ಕೆ ಅಶೋಕ ಮನಗೂಳಿ; ವರಿಷ್ಠರಿಂದ ಅತೃಪ್ತರ ಮನವೊಲಿಕೆ

ಬಸವರಾಜ ಸಂಪಳ್ಳಿ
Published 19 ಮಾರ್ಚ್ 2021, 19:30 IST
Last Updated 19 ಮಾರ್ಚ್ 2021, 19:30 IST
ಅಶೋಕ ಮನಗೂಳಿ
ಅಶೋಕ ಮನಗೂಳಿ   

ವಿಜಯಪುರ: ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಗೆ ಮುನ್ನವೇ ಕಾಂಗ್ರೆಸ್‌ ಪಕ್ಷವು ಅಭ್ಯರ್ಥಿಯನ್ನು ಘೋಷಣೆ ಮಾಡುವ ಮೂಲಕ ತನ್ನ ಸಾಂಪ್ರದಾಯಕ ‘ರಾಜಕೀಯ ವ್ಯೂಹ‘ ಬದಲಿಸಿದೆ.

ಬಿಜೆಪಿ, ಜೆಡಿಎಸ್‌ ಸೂಕ್ತ ಅಭ್ಯರ್ಥಿಗಳಿಗಾಗಿ ಇನ್ನೂ ತಡಕಾಡುತ್ತಿರುವ ಸನ್ನಿವೇಶದಲ್ಲಿ ಕಾಂಗ್ರೆಸ್‌ ಪಕ್ಷವು, ಕೇವಲ 10 ದಿನಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಅಶೋಕ ಮನಗೂಳಿ ಅವರನ್ನು ಕಣಕ್ಕಿಳಿಸುವ ಮೂಲಕ ಪ್ರಬಲ ಪೈಪೋಟಿಯ ಸೂಚನೆ ನೀಡಿದೆ.

ಸಿಂದಗಿ ಕ್ಷೇತ್ರಕ್ಕೆ ಇದುವರೆಗೆ ನಡೆದ ಚುನಾವಣೆಗಳಲ್ಲಿ ಬಹುತೇಕ ಹಿಂದುಳಿದ ಸಮುದಾಯದವರಿಗೆ ಮಣೆ ಹಾಕುತ್ತಾ ಬಂದಿದ್ದ ಕಾಂಗ್ರೆಸ್‌ ಇದೀಗ ಕ್ಷೇತ್ರದಲ್ಲಿ ಪ್ರಬಲ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸೇರಿದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಹೊಸ ಪ್ರಯೋಗಕ್ಕೆ ಕೈಹಾಕಿದೆ.

ADVERTISEMENT

‘ಆಡಳಿತ ಪಕ್ಷವಾದ ಬಿಜೆಪಿ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಲಿದೆ. ಚುನಾವಣೆಯಲ್ಲಿ ಜಯಗಳಿಸಲುಅಧಿಕಾರ ಮತ್ತು ಹಣಬಲವನ್ನು ಹೆಚ್ಚು ಬಳಸಲಿದೆ. ಅಲ್ಲದೇ, ಕಳೆದ ಮೂರು ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಟಿಕೆಟ್‌ ನೀಡಿದ್ದರೂ ಕಾಂಗ್ರೆಸ್‌ ಗೆಲ್ಲಲು ಸಾಧ್ಯವಾಗಿಲ್ಲ.ಜೆಡಿಎಸ್‌ ಶಾಸಕರಾಗಿದ್ದ ಎಂ.ಸಿ.ಮನಗೂಳಿ ನಿಧನದಿಂದಕ್ಷೇತ್ರದಲ್ಲಿ ಅವರ ಕುಟುಂಬದ ಮೇಲೆ ಅನುಕಂಪ ಇದೆ. ಇಂತಹ ಸಂದರ್ಭದಲ್ಲಿ ಎಲ್ಲ ದೃಷ್ಟಿಯಿಂದ ಅಶೋಕ ಮನಗೂಳಿ ಅವರನ್ನೇ ಕಣಕ್ಕಳಿಸುವುದು ಸೂಕ್ತ’ ಎಂಬುದನ್ನು ತಿಳಿ ಹೇಳುವ ಮೂಲಕ ಪಕ್ಷದ ಟಿಕೆಟ್‌ ಆಕಾಂಕ್ಷಿಗಳನ್ನು ತಣ್ಣಗಾಗಿಸುವ ಮೂಲಕ ಬಂಡಾಯವನ್ನು ಆರಂಭದಲ್ಲೇ ಶಮನ ಮಾಡಿದೆ. ಆದರೆ, ಇದರ ಪರಿಣಾಮಚುನಾವಣಾ ಫಲಿತಾಂಶದ ಮೇಲೆಆಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕೈಜೋಡಿಸಲು ಮನವಿ:

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ ಮನಗೂಳಿ,ನಮ್ಮ ಪಕ್ಷದ ರಾಷ್ಟ್ರ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಎಚ್‌.ಕೆ.ಪಾಟೀಲ, ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ, ಜಿಲ್ಲೆಯವರೇ ಆದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಸಿ.ಎಸ್‌.ನಾಡಗೌಡ, ಎಸ್‌.ಆರ್‌.ಪಾಟೀಲ, ರಾಜು ಅಲಗೂರ, ಸುನೀಲ್ ಗೌಡ ಅವರುನನ್ನ ಮೇಲೆ ನಂಬಿಕೆ ಮತ್ತು ವಿಶ್ವಾಸ ಇಟ್ಟು ಟಿಕೆಟ್‌ ನೀಡಿದ್ದಾರೆ ಎಂದು ಹೇಳಿದರು.

‘ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಿಠಲ ಕೋಳೂರು, ಮಾಜಿ ಶಾಸಕ ಶರಣಪ್ಪ ಸುಣಗಾರ ಹಾಘೂ ಸ್ಥಳೀಯ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಯನ್ನು ಎದುರಿಸುತ್ತೇನೆ’ ಎಂದರು.

‘ತಂದೆಯವರು ಎರಡೂವರೆ ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂಸಿದ್ಧರಾಮಯ್ಯ ಸರ್ಕಾರದ ಸಾಧನೆ, ಯುಪಿಎ ಸರ್ಕಾರದ ಜನಪರ ಕಾರ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇನೆ. ಕ್ಷೇತ್ರದಲ್ಲಿ 20 ವರ್ಷಗಳಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಪಕ್ಷವನ್ನು ಕ್ಷೇತ್ರದಲ್ಲಿ ಗೆಲ್ಲಿಸಲು ಎಲ್ಲರೂ ನನ್ನೊಂದಿಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಬೇಷರತ್‌ ಆಗಿ ಕಾಂಗ್ರೆಸ್‌ ಸೇರಿದ್ದೆ. ಜೊತೆಗೆ ಪ‍್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದೆ. ಟಿಕೆಟ್‌ ನನಗೆ ಸಿಕ್ಕಿರುವುದು ಬಹಳ ಸಂತೋಷವಾಗಿದೆ. ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸವಿದೆ.

ಅಶೋಕ ಮನಗೂಳಿ, ಕಾಂಗ್ರೆಸ್‌ ಅಭ್ಯರ್ಥಿ, ಸಿಂದಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.