
ಸಿಂದಗಿ: ತಾಲ್ಲೂಕಿನ ಗೋಲಗೇರಿಯಲ್ಲಿ ಗೊಲ್ಲಾಳೇಶ್ವರ ದೇವಸ್ಥಾನದ ಬಳಿ ವಾರದ ಸಂತೆ ನಡೆಯುವ ಸ್ಥಳ, ಚಿಕ್ಕಅಲ್ಲಾಪುರ, ಕೊಂಡಗೂಳಿ, ಕಣಮೇಶ್ವರ ಗ್ರಾಮಗಳಿಗೆ ಹೋಗುವ ಮುಖ್ಯರಸ್ತೆಯಲ್ಲಿ ಹಾಕಿರುವ ಬೃಹದಾಕಾರದ ಕಲ್ಲುಗಳನ್ನು ಶೀಘ್ರ ತೆರವುಗೊಳಿಸದಿದ್ದರೆ ಹೋರಾಟ ಅನಿವಾರ್ಯ ಎಂದು ಬಹುಜನ ಸಮಾಜ ಪಾರ್ಟಿ ತಾಲ್ಲೂಕು ಶಾಖೆ ಅಧ್ಯಕ್ಷ ಬಸನಗೌಡ ಪಾಟೀಲ ಹೇಳಿದರು.
ಈ ಸ್ಥಳಗಳಲ್ಲಿ ವ್ಯಕ್ತಿಯೊಬ್ಬ ಅಕ್ರಮವಾಗಿ ಹಾಕಿರುವ ಕಲ್ಲುಗಳಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಜರುಗಿಸಿಲ್ಲ. ವಾರದ ಸಂತೆ ಇದೇ ಸ್ಥಳದಲ್ಲಿ ನಡೆಯುತ್ತದೆ. ಸುತ್ತ-ಮುತ್ತಲಿನ ರೈತರು ಸಂತೆಗೆ ಬರುವುದರಿಂದ ತೊಂದರೆ ಎದುರಿಸುತ್ತಿದ್ದಾರೆ. ಗ್ರಾಮದ ದೈವ ಗೊಲ್ಲಾಳೇಶ್ವರ ದೇವಸ್ಥಾನಕ್ಕೆ ದೂರದ ಊರುಗಳಿಂದ ವಾಹನಗಳನ್ನು ತೆಗೆದುಕೊಂಡು ಬರುವ ಭಕ್ತರಿಗೆ ವಾಹನ ನಿಲ್ಲಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದರು.
ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.