ವಿಜಯಪುರ: ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಬಾಣಂತಿಯರ ಆರೈಕೆದಾರರ ವಾಸ್ತವ್ಯಕ್ಕೆ ತಂಗುದಾಣ(ಶೆಲ್ಟರ್)ಗಳನ್ನು ನಿರ್ಮಿಸಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಣಂತಿಯರಿಗೆ ಬೆಡ್ ಒದಗಿಸಲಾಗಿರುತ್ತದೆ. ಆದರೆ, ಆರೈಕೆದಾರರು ನೆಲ, ಆಸ್ಪತ್ರೆಯ ಆವರಣದಲ್ಲಿ ಮಲಗಿಕೊಳ್ಳುವಂತಹ ಸ್ಥಿತಿ ಇದೆ. ಹೀಗಾಗಿ ಅವರಿಗೆ ತಂಗುದಾಣಗಳನ್ನು ನಿರ್ಮಿಸಲಾಗುವುದು. ಶೌಚಾಲಯ, ಸ್ನಾನಗೃಹ, 24x7 ಕ್ಯಾಂಟೀನ್ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಉಪಾಹಾರ ಮತ್ತು ಊಟವನ್ನು ಕೊಡಬೇಕೋ ಅಥವಾ ಕನಿಷ್ಠ ದರ ನಿಗದಿಪಡಿಸಬೇಕೋ ಎನ್ನುವ ಕುರಿತು ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಟಾ ವೈರಸ್ ಲಸಿಕೆಯನ್ನು ಉಚಿತವಾಗಿ ನೀಡುವಂತೆ ಆದೇಶಿಸಲಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ನಿಗದಿತ ಅವಧಿಯಲ್ಲಿ ರೋಟಾ ವೈರಸ್ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.