ADVERTISEMENT

ತೊಗರಿ ಕ್ವಿಂಟಲ್‌ಗೆ ಹೆಚ್ಚುವರಿ ₹450 ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ ಘೋಷಣೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2025, 13:28 IST
Last Updated 20 ಜನವರಿ 2025, 13:28 IST
<div class="paragraphs"><p>ಶಿವಾನಂದ ಪಾಟೀಲ</p></div>

ಶಿವಾನಂದ ಪಾಟೀಲ

   

ವಿಜಯಪುರ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಲ್‌ಗೆ ಹೆಚ್ಚುವರಿ ₹ 450 ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ ₹140 ಕೋಟಿ ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.

ನಗರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ಒಟ್ಟು ಪ್ರತಿ ಕ್ರಿಂಟಾಲ್‌ಗೆ ₹ 8 ಸಾವಿರ ಬೆಂಬಲ ಬೆಲೆ ನೀಡಲಾಗುವುದು ಎಂದು ತಿಳಿಸಿದರು.

ADVERTISEMENT

ಕೇಂದ್ರ ಸರ್ಕಾರದ ನಫೆಡ್‌ ಖರೀದಿ ಏಜನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸದ ಕಾರಣ ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ರಾಜ್ಯದಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ತೊಗರಿ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಇದೇ ಮೊದಲ ಬಾರಿಗೆ ₹8 ಸಾವಿರ ಧಾರಣಿಯಲ್ಲಿ ತೊಗರಿ ಖರೀದಿ ಮಾಡಲಾಗುತ್ತಿದೆ. ಇದುವರೆಗೆ ₹5800 ಧಾರಣಿಯಲ್ಲಿ ಖರೀದಿ ಮಾಡಲಾಗುತ್ತಿತ್ತು. ಬೀದರ್‌ನಿಂದ ಚಿತ್ರದುರ್ಗ ಜಿಲ್ಲೆಯವರೆಗೆ ತೊಗರಿ ಬೆಳೆಯಲಾಗುತ್ತಿದ್ದು, ರೈತರು ಬೆಂಬಲ ಬೆಲೆ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿ ಕ್ವಿಂಟಾಲ್‌ಗೆ ₹450  ಹೆಚ್ಚುವರಿ ಕೊಡುವ ನಿರ್ಧಾರ ಕೈಗೊಂಡಿದೆ ಎಂದು ವಿವರಿಸಿದರು.

ಆಂಧ್ರದ ಜೋಳಕ್ಕೆ ತಡೆ: ಆಂಧ್ರಪ್ರದೇಶದ ಹೈಬ್ರಿಡ್‌ ಜೋಳವನ್ನು ರಾಜ್ಯದ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿರುವುದು ಗಮನಕ್ಕೆ ಬಂದಿದ್ದು, ಆಂಧ್ರದ ಜೋಳಕ್ಕೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು.

ಹೈಬ್ರಿಡ್‌ ಜೋಳಕ್ಕೆ ₹ 3370 ಹಾಗೂ ಮಾಲದಂಡಿ ಜೋಳಕ್ಕೆ ₹3400 ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಒಟ್ಟು 5 ಲಕ್ಷ ಕ್ವಿಂಟಲ್‌ ಖರೀದಿ ಮಾಡಲಾಗುವುದು. ಇದುವರೆಗೆ ಕೆಲವೇ ಕೆಲವು ಜಿಲ್ಲೆಗಳ ರೈತರು ಮಾತ್ರ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುತ್ತಿದ್ದರು. ಈ ಬಾರಿ ಜೋಳ ಬೆಳೆಯುವ ಎಲ್ಲ ಜಿಲ್ಲೆಗಳಿಗೂ ಖರೀದಿ ಪ್ರಮಾಣವನ್ನು ಹಂಚಿಕೆ ಮಾಡಲಾಗುವುದು ಎಂದು ವಿವರಿಸಿದರು.

ಕಳಪೆ ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟದ ದೂರುಗಳು ಹೆಚ್ಚಾಗಿದ್ದು, ಅಂತಹವರಿಗೆ ಶಿಕ್ಷೆ ಕೊಡಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕೃಷಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.