
ಸಿಂದಗಿ: ‘ವಿದ್ಯಾರ್ಥಿನಿಯರು ಸತತ ಅಧ್ಯಯನಶೀಲರಾಗಿ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು. ಮೊಬೈಲ್ ಗೀಳು, ಫೇಸ್ಬುಕ್, ವಾಟ್ಸ್ಆ್ಯಪ್, ಇನ್ಸ್ಟಾಗ್ರಾಮದಂತಹ ಸಾಮಾಜಿಕ ಜಾಲತಾಣದಿಂದ ದೂರವಿರಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದೀಪಾ ಕಾಳೆ ಹೇಳಿದರು.
ನಗರದ ಜಿ.ಪಿ.ಪೋರವಾಲ ಡಿಗ್ರಿ ಕಾಲೇಜು ಎದುರಿನ ಮೆಟ್ರಿಕ್ ನಂತರದ ಬಾಲಕಿಯರ ವಸತಿನಿಲಯದಲ್ಲಿ ಶ್ರೀಧರಸ್ವಾಮಿ ವಿದ್ಯಾವರ್ಧಕ ಸಂಘ ವಿಜಯಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
‘ಗ್ರಾಮೀಣ ಭಾಗದಲ್ಲಿ ಬಾಲ್ಯವಿವಾಹದ ಬಗ್ಗೆ ಕಂಡು ಬಂದರೆ ನಮ್ಮ ಇಲಾಖೆಯ ಗಮನಕ್ಕೆ ತರಬೇಕು. ಮಕ್ಕಳ ಸಹಾಯವಾಣಿ, ಮಹಿಳಾ ಸಹಾಯವಾಣಿ ಹಾಗೂ ತುರ್ತು ಸಂದರ್ಭದಲ್ಲಿ ಪೊಲೀಸ್ ಸಹಾಯವಾಣಿ 112 ಇವುಗಳನ್ನು ವಿದ್ಯಾರ್ಥಿನಿಯರು ನೆನಪಿನಲ್ಲಿಟ್ಟುಕೊಂಡು ಅಗತ್ಯ ಸಮಯದಲ್ಲಿ ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ ಮಾತನಾಡಿ, ‘ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗಾಗಿ ಇಲಾಖೆಯ ವಸತಿ ನಿಲಯ ಪ್ರಾರಂಭಿಸಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾಗಬೇಕು. ಇದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿಯೂ ವಿಶೇಷ ಆಸಕ್ತಿ ವಹಿಸಬೇಕು’ ಎಂದು ಸಲಹೆ ನೀಡಿದರು.
ಪ್ರೇರಣಾ ಶಿಕ್ಷಣ ಸಂಸ್ಥೆಯ ಮುಖ್ಯಶಿಕ್ಷಕಿ ಸಾವಿತ್ರಿ ಅಸ್ಕಿ, ಮಿಷನ್ ಶಕ್ತಿ ಯೋಜನೆ ಸಂಯೋಜಕಿ ಭಾರತಿ ಪಾಟೀಲ ಉಪನ್ಯಾಸ ನೀಡಿದರು. ಸಂಘದ ಅಧ್ಯಕ್ಷ ಕೆ.ಎನ್.ಮೇಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನೀಲ ಹಳ್ಳಿ, ವಸತಿ ನಿಲಯದ ಮೇಲ್ವಿಚಾರಕಿ ಜಯಶ್ರೀ ಬಿರಾದಾರ, ಮಹಾಂತೇಶ ಮಠಪತಿ, ರೂಪಾ ಪೂಜಾರಿ, ರಶ್ಮಿ ನೂಲಾನವರ, ಸುಜಾತಾ ಕಲಬುರ್ಗಿ, ಸುವರ್ಣಾ ಸೊನ್ನದ, ವಿದ್ಯಾ ದೇಸಾಯಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.