ವಿಜಯಪುರ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು. ಅಲ್ಪಸಂಖ್ಯಾತ ಮಕ್ಕಳ ಶೈಕ್ಷಣಿಕ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ, ಮನೆ-ಮನೆಗೆ ಹೋಗಿ ನೋಂದಣಿ ಮಾಡುವ ಮೂಲಕ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪರಿಶೀಲನಾ ಸಮಿತಿಯ ಪ್ರಥಮ ತ್ರೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಕಟ್ಟಡಗಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಬೇಕು. ಬಾಡಿಗೆ ಕಟ್ಟಡ ಅವಶ್ಯವಿದ್ದಲ್ಲಿ ಮಾಹಿತಿ ಒದಗಿಸಿ, ಅಂಗನವಾಡಿ ಕಟ್ಟಡ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಉರ್ದು ಶಾಲೆಗಳಲ್ಲಿ ಕೊಠಡಿಗಳು, ಶಿಕ್ಷಕರ ಕೊರತೆ ಸೇರಿದಂತೆ ವಿವಿಧ ಕೊರತೆಗಳನ್ನು ನಿವಾರಿಸಿಕೊಂಡು ಮಕ್ಕಳ ಶಿಕ್ಷಣಕ್ಕೆ ಗಮನ ಹರಿಸಬೇಕು. ಕಲಿಕೆಯಲ್ಲಿ ಹಿಂದುಳಿದ ವರ್ಗಗಳಿಗೆ ಪರಿಹಾರ ಬೋಧನೆ ಮಾಡಬೇಕು. ಫಲಿತಾಂಶದಲ್ಲಿ ಪ್ರತಿಶತ ಹೆಚ್ಚಿಸಲು ಮುಖ್ಯವಾಗಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು, ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಪ್ರಾಥಮಿಕ ಹಂತದಲ್ಲಿಯೇ ಶಿಕ್ಷಣಕ್ಕೆ ಒತ್ತು ನೀಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಅಲ್ಪಸಂಖ್ಯಾತ ಸಮುದಾಯ ಜನ ಇರುವಲ್ಲಿ ತಿಳಿವಳಿಕೆ ನೀಡಿ, ಶಾಲಾ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಬೇಕು. ಕ್ರೀಯಾಯಶೀಲತೆಯಿಂದ ಕಾರ್ಯನಿರ್ವಹಿಸಿ ಶೈಕ್ಷಣಕ ಗುಣಮಟ್ಟ ಹೆಚ್ಚಿಸಲು ಅಗತ್ಯ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸುವಂತೆ ಅವರು ಸೂಚನೆ ನೀಡಿದರು.
ಅನುದಾನಿತ ಶಾಲೆಗಳಲ್ಲಿ ಕಳಪೆ ಫಲಿತಾಂಶ ಬಂದಿದೆ. ಈ ಕುರಿತು ವಿಶೇಷ ತನಿಖಾ ವರದಿ ತಯಾರಿಸಿ ಸಲ್ಲಿಸಬೇಕು ಎಂದರು.
ವಿದ್ಯಾರ್ಥಿವೇತನ ಸೌಲಭ್ಯ ಪಡೆದುಕೊಳ್ಳಲು ಸೂಕ್ತ ಮಾಹಿತಿ ಒದಗಿಸಬೇಕು. ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ನಂತರ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿಸಿಕೊಳ್ಳದೇ ಅನುದಾನಕ್ಕನುಸಾರವಾಗಿ ವಿದ್ಯಾರ್ಥಿವೇತನ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಆರ್ಥಿಕ ಸ್ವಾವಲಂಬನೆ ಸಾಧಿಸಲು ಶೇ 15ರಷ್ಟು ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸಾಲ-ಸೌಲಭ್ಯ ಒದಗಿಸುವ ಮೂಲಕ ನಿಗದಿತ ಗುರಿ ಸಾಧನೆಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.
ಅಲ್ಪಸಂಖ್ಯಾತ ನಿಗಮದಿಂದ ಅನುಷ್ಠಾನಗೊಳಿಸುವ ಅರಿವು ಶೈಕ್ಷಣಿಕ ಸಾಲ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.
ಉದ್ಯೋಗ ಮೇಳಗಳನ್ನು ಆಯೋಜಿಸಿ ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ, ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಎಸ್. ಪಾಟೀಲ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮದ ಜಿಲ್ಲಾಮಟ್ಟದ ಸಮಿತಿ ಸದಸ್ಯರಾದ ಬಸೀರ ಅಹ್ಮದ್ ರಿಸಾಲದಾರ, ಎಸ್.ಎಸ್.ತಾಜೀಮತರಕ್, ನೆಲ್ಸನ್ ನೊರಮನ್ ಐಝಾಕ್ಸ್, ಜ್ಯೋತಿಂದ್ರ ಹಣಮಂತ ಆಯತವಾಡ, ಬಂದೇನವಾಜ ಮುಲ್ಲಾ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದಶಕಿ ಟಿ.ಎಚ್.ಕೊಲ್ಹಾರ ಸಭೆಯಲ್ಲಿ ಉಪಸ್ಥಿತರಿದ್ದರು.
ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣಕ್ಕೆ ಹಿಂದೇಟು ಹಾಕುತ್ತಿರುವುದೇಕೇ ಎಂಬುದನ್ನು ಪತ್ತೆ ಹಚ್ಚಬೇಕು. ಶಾಲೆಗಳ ದಾಖಲಾತಿ ಕಡಿಮೆಯಾಗಲು ಇರುವ ಮೂಲ ಕಾರಣ ಕಂಡುಹಿಡಿಯಬೇಕುಡಾ.ಆನಂದ್ ಕೆ. ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.