ಚಡಚಣ: ನಿಗದಿತ ಸಮಯಕ್ಕೆ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಝಳಕಿ ಗ್ರಾಮದ ಬಸ್ ನಿಲ್ದಾಣದಲ್ಲಿ ಮಂಗಳವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಝಳಕಿ ಗ್ರಾಮ ಪ್ರಮೂಖ ಶೈಕ್ಷಣಿಕ ಕೇಂದ್ರವಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಂದ ಹಿಡಿದು ಪದವಿ, ಡಿಪ್ಲೊಮಾ ಕಾಲೇಜು ಇದ್ದು, ನಿತ್ಯ ಸುತ್ತಲಿನ ಗ್ರಾಮಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಆಗಮಿಸುತ್ತಾರೆ. ಆದರೆ ನಿಯಮಿತವಾಗಿ ಹಾಗೂ ನಿಗದಿತ ಸಮಯಕ್ಕೆ ಬಸ್ ಸೌಕರ್ಯ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಸಾದ್ಯವಾಗುತ್ತಿಲ್ಲ. ಕೂಡಲೇ ಬಸ್ ಸೌಲಭ್ಯ ಒದಗಿಸಲು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಸ್ಥಳಕ್ಕೆ ಬಂದ ಇಂಡಿ ಡಿಪೊ ವ್ಯವಸ್ಥಾಪಕ ಅರವಿಂದ ತರಡಿ, ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ ಮಾತನಾಡಿ, ಬೇಡಿಕೆ ಈಡೇರಿಸುವ ಭರವಸೆ ನೀಡಿದರು.
ಸ್ಥಳೀಯ ಸರ್ಕಾರಿ ಪ್ರೌಢಶಾಲೆಯಿಂದ ಬಸ್ ನಿಲ್ದಾಣದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಎಬಿವಿಪಿ ಪದಾಧಿಕಾರಿಗಳಾದ ರಾಘವೇಂದ್ರ ಕಾಪಸೆ, ರಾಹುಲ ಹಿರೇಮಠ, ಇಲಿಯಾಸ್ ಬಾಗವಾನ, ರಾಘವೇಂದ್ರ ತಳವಾರ, ಹರೀಶ ಶೆಟ್ಟಿ, ಉದಯ ಹೊನಗೊಂಡೆ, ಬೀರಪ್ಪ ಆಸಂಗಿ, ನಿರಂಜನ ಹೂಗಾರ, ಅಕ್ಷಯ ಬಿಲ್ಕಾರ, ರಾಕೇಶ ಪಾಟೀಲ, ಸಿದ್ಧಾರಾಮ ಕೋಳಿ, ಶಿವರಾಜ ಡೆಂಗಿ, ಲಕ್ಷ್ಮೀ ಬಬಲಾದಿ, ಸುಧಾರಾಣಿ ಬಿರಾದಾರ, ರಾಣಿ ಅರ್ಜನಾಳ, ವಿದ್ಯಾಶ್ರೀ ಬಿರಾದಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.