ವಿಜಯಪುರ: ನಗರದ ಗೋಳಗುಮ್ಮಟ ವೀಕ್ಷಣೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ನಗರದ ಅಲ್ ಅಮಿನ್ ವೈದ್ಯಕೀಯ ಕಾಲೇಜಿನಲ್ಲಿ ಅಟೆಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಲೀಂ ಹೊನವಾಡ(54)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬುಧವಾರ ಸುಮಾರು ಬೆಳಿಗ್ಗೆ 11 ಗಂಟೆ ವೇಳೆಗೆ ಗೋಳಗುಮ್ಮಟ ವೀಕ್ಷಣೆಗೆ ಬಂದಿದ್ದ ಸಲೀಂ ಗೋಳಗುಮ್ಮಟದ ಮೇಲಿನಿಂದ ಏಕಾಏಕಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಈ ಸಂದರ್ಭದಲ್ಲಿ ಗೋಳಗುಮ್ಮಟದ ವೀಕ್ಷಣೆಗೆ ಬಹಳಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರು. ಅವರ ಸಮ್ಮುಖದಲ್ಲೇ ಈ ಘಟನೆ ನಡೆದಿದ್ದು, ಪ್ರವಾಸಿಗರು ಬೆಚ್ಚಿ ಬಿದ್ದರು.
ಸ್ಥಳಕ್ಕೆ ಗೋಳಗುಮ್ಮಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.