ತಾಳಿಕೋಟೆ: ‘ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ಪ್ರಸಕ್ತ ವರ್ಷದಿಂದಲೇ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಿ ಕಾರ್ಯಾರಾಂಭ ಮಾಡಲಾಗುವುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ‘ವಿಜಯನಗರ ಸಂಸ್ಥಾನದ ಅರಸರ ಸ್ಮರಣಾಥ ದಿನ’ದ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಮಾತೃ ಚೈತನ್ಯ ಕಾರ್ಯಕ್ರಮ, ಅಸಾಂಕ್ರಾಮಿಕ ರೋಗಗಳ ಕುರಿತು ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ಪಿಂಕ್ ಲಸಿಕಾ ಬೂತ್ ಅನ್ನು ವರ್ಚುಲ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
‘ಕರ್ನಾಟಕದ ಇತಿಹಾಸದಲ್ಲಿ ವಿಜಯನಗರ ಸಂಸ್ಥಾನದ ಆಡಳಿತ ಸುವರ್ಣಾಕ್ಷರಗಳಿಂದ ಬರೆಯಲ್ಪಟ್ಟಿದೆ. ಆ ಸಾಮ್ರಾಜ್ಯದ ಸವಿ ನೆನಪು ಕೊನೆಯವರೆಗೂ ಉಳಿಯಬೇಕು. ಮಹಿಳೆಯರಿಗಾಗಿ ಪ್ರತ್ಯೇಕವಾಗಿ ಆರೋಗ್ಯ ಸೇವೆಯನ್ನು ನೀಡುವ ಸಲುವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದು ಪ್ರಶಂಸಾರ್ಹ’ ಎಂದರು.
ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ವರ್ಚುಲ್ ಮೂಲಕ ಮಾತನಾಡಿ, ‘ತಾಲ್ಲೂಕು ಆಸ್ಪತ್ರೆ ಮಾಡುವುದಾಗಿ ನಿರ್ಧರಿಸಿದ ಸಚಿವರಿಗೆ ಅಬಿನಂಧನೆ ಸಲ್ಲಿಸುತ್ತೇನೆ. ಮತಕ್ಷೇತ್ರಕ್ಕೆ ಹೆಚ್ಚಿನ ಆರೋಗ್ಯ ಸೇವೆ ನೀಡಲು ಸಹಕಾರ ಕೋರುತ್ತೇನೆ’ ಎಂದರು.
ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನೀಕುಮಾರ, ಆರೋಗ್ಯ ಇಲಾಖೆಯ ಆಯುಕ್ತ ಡಿ.ರಣದೀಪ, ನಿರ್ದೇಶಕಿ ಇಂದುಮತಿ, ಜಿಲ್ಲಾಧಿಕಾರಿ ಪಿ.ಸುನೀಲಕಮಾರ, ಜಿಲ್ಲಾ ಪಂಚಾಯಿತಿ ಸಿಇಒ ಗೋವಿಂದರೆಡ್ಡಿ ಅವರು ವರ್ಚುಲ್ನಲ್ಲಿ ಭಾಗವಹಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉತ್ತರ ಕರ್ನಾಟಕದ ಹೆಚ್ಚುವರಿ ನಿರ್ದೇಶಕ ಡಾ.ಪ್ರಭು ಬಿರಾದಾರ, ಉಪ ನಿರ್ದೇಶಕಿ ಡಾ.ಲಕ್ಷ್ಮೀಬಾಯಿ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್ಲ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ, ಆಡಳಿತ ವೈದ್ಯಾಧಿಕಾರಿ ಡಾ.ಎಸ್.ಬಿ.ಪಾಟೀಲ, ಡಾ.ಮಲ್ಲನಗೌಡ ಬಿರಾದಾರ, ಡಾ.ಐ.ಬಿ.ತಳ್ಳೋಳ್ಳಿ, ಡಾ.ಶ್ರೀಶೈಲ ಹುಕ್ಕೇರಿ, ಡಾ.ಮಧು ಅಗರವಾಲ, ಡಾ.ವಿಜಯಲಕ್ಷ್ಮೀ ಹಜೇರಿ ಸೇರಿದಂತೆ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.