ವಿಜಯಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಬುಧವಾರ 500 ಮೀ. ಉದ್ದದ ತ್ರಿವರ್ಣ ಧ್ವಜವನ್ನು ಹೊತ್ತು ನಗರದಲ್ಲಿ ಹೆಜ್ಜೆ ಹಾಕಿ ಗಮನ ಸೆಳೆದರು.
ತಿರಂಗಾ ರ್ಯಾಲಿ ಅಂಗವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ‘ಭಾರತ್ ಮಾತಾ ಕಿ ಜೈ’... ‘ಜೈ ಜವಾನ್ ಜೈ ಕಿಸಾನ್’.. ಎಂಬ ಘೋಷಣೆ ಕೂಗಿದರು.
ನಗರದ ಛತ್ರಪತಿ ಶಿವಾಜಿ ವೃತ್ತದಿಂದ ಪ್ರಾರಂಭಗೊಂಡ ರ್ಯಾಲಿಯು ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಸರಾಫ್ ಬಜಾರ್ ಮಾರ್ಗವಾಗಿ ಸಿದ್ಧೇಶ್ವರ ದೇವಸ್ಥಾನ ತಲುಪಿತು.
ಇಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮವನ್ನು ಕಮಾಂಡರ್ ಭೀಮಪ್ಪ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ‘ಭಾರತೀಯ ಯುವಕರಲ್ಲಿರುವ ದೇಶ ಭಕ್ತಿ ಮೆಚ್ಚುವಂತಹದ್ದು. ದೇಶದ ಭವಿಷ್ಯದ ದೃಷ್ಟಿಯಿಂದ ಯುವಕರು ಸೈನ್ಯಕ್ಕೆ ಸೇರಲು ಮುಂದಾಗಬೇಕು’ ಎಂದು ಹೇಳಿದರು.
ಕಾರ್ಯಕ್ರಮದ ವಕ್ತಾರ ಡಾ.ಅಮೃತಾನಂದ ಸ್ವಾಮೀಜಿ ಮಾತನಾಡಿ, ‘ನಮ್ಮ ದೇಶದ ಯುವಶಕ್ತಿಯು ಮುಂಚೂಣಿ ಸ್ಥಾನದಲ್ಲಿದೆ. ಆದರೆ, ಇಂದಿಗೂ ನಮ್ಮ ರಾಷ್ಟದಲ್ಲಿ ದೇಶದ್ರೋಹಿ ಮಾನಸಿಕತೆಯ ವಿಚಾರಧಾರೆಯ ಕೆಲವು ಮನಸ್ಸುಗಳು ತಲೆ ಎತ್ತುತ್ತಿವೆ. ತಮ್ಮ ಸ್ವಾರ್ಥಕ್ಕಾಗಿ ಸಮಾಜವನ್ನು ಒಡೆಯುವ ಹುನ್ನಾರ ನಡೆಸುತ್ತಿವೆ’ ಎಂದು ವಿಷಾದ ವ್ಯಕ್ತಪಡಿಸಿದರು.
ಎಬಿವಿಪಿ ವಿಭಾಗ ಸಂಚಾಲಕ ಸಚಿನ್ ಕುಳಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಗರ ಘಟಕದ ಅಧ್ಯಕ್ಷ ಎಂ. ಸಿ.ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಚಿನ್ ಬಾಗೇವಾಡಿ ಇದ್ದರು.
ಜಿಲ್ಲಾ ಸಂಚಾಲಕ ಬಸವರಾಜ ಪೂಜಾರಿ ಸ್ವಾಗತಿಸಿದರು. ನಗರ ಸಹ ಕಾರ್ಯದರ್ಶಿ ಐಶ್ವರ್ಯ ಕುಲಕರ್ಣಿ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.