ADVERTISEMENT

ಸರ್ಕಾರ ಕೂಡಲೇ ತೊಗರಿ ಖರೀದಿ ಕೇಂದ್ರ ತೆರೆಯಲಿ: ಬಿಜೆಪಿ ರೈತಮೋರ್ಚಾ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 13:41 IST
Last Updated 11 ಡಿಸೆಂಬರ್ 2025, 13:41 IST
   

ವಿಜಯಪುರ: ಕೇಂದ್ರ ಸರ್ಕಾರವು ತೊಗರಿಗೆ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8 ಸಾವಿರ ನಿಗದಿಪಡಿಸಿ, ನಾಫೆಡ್  ಮತ್ತು ಎನ್.ಸಿ.ಸಿ.ಎಫ್ ಮೂಲಕ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಸಲು ಅನುಮತಿ ನೀಡಿದ್ದು,  ರಾಜ್ಯ ರ್ಕಾರ ಕೂಡಲೇ ಅನುಷ್ಠಾನಕ್ಕೆ ತರಲು ತೊಗರಿ ಖರೀದಿ ಕೇಂದ್ರ ತೆರೆದು, ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ ಜೋಶಿ ಅವರು ಡಿ.4ರಂದು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ  ಸಚಿವ ಶಿವರಾಜಸಿಂಗ್ ಚವ್ಹಾಣ ಅವರಿಗೆ, ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲು ಅನುಮತಿ ನೀಡುವಂತೆ ಕೋರಿ ಪತ್ರ ಬರೆದಿದ್ದರು. ಇದಕ್ಕೆ ಕೇಂದ್ರ ಕೃಷಿ ಸಚಿವರು ಸ್ಪಂದಿಸಿದ್ದಾರೆ. ರಾಜ್ಯದ ರೈತರ ಹಿತ ಕಾಪಾಡುವಲ್ಲಿ ಕೇಂದ್ರದ ಮೋದಿ ಸರ್ಕಾರಕ್ಕೆ ಇರುವ ನಿಜವಾದ ಕಾಳಜಿ, ಕಳಕಳಿ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ತೊಗರಿಗೆ ಮಾರುಕಟ್ಟೆ ದರ ಕ್ವಿಂಟಾಲ್‌ಗೆ ₹5830 ರಿಂದ ₹ 6700ರವರೆಗೆ ಇದೆ. ಇದು ಎಂ.ಎಸ್.ಪಿ ದರಕ್ಕಿಂತ ಕಡಿಮೆಯಾಗಿದೆ. ಇದನ್ನು ಮನಗಂಡು ಈಗಾಗಲೇ ಕ್ವಿಂಟಾಲ್ ತೊಗರಿಗೆ ₹8000 ಕನಿಷ್ಠ ಎಂ.ಎಸ್.ಪಿ ದರವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಈ ತಿಂಗಳಲ್ಲಿ ರೈತರು ತೊಗರಿ ಕಟಾವು ಪ್ರಾರಂಭಿಸಿದ್ದು, ಈಗಾಗಲೇ ತೊಗರಿ ಮಾರುಕಟ್ಟೆಗೆ ಬರತೊಡಗಿದೆ. ಈ ಸಂದರ್ಭ ಖರೀದಿ ಪ್ರಮಾಣ ಹೆಚ್ಚಿಸಿರುವುದು ಸಾಕಷ್ಟು ಅನುಕೂಲ ಮಾಡಿಕೊಟ್ಟಂತಾಗಿದೆ ಎಂದಿದ್ದಾರೆ.

ADVERTISEMENT

ರಾಜ್ಯ ಸರ್ಕಾರ ತ್ವರಿತವಾಗಿ ರಾಜ್ಯದ ಪ್ರತಿಯೊಂದು ಸಹಕಾರಿ ಸೊಸೈಟಿಗಳಲ್ಲಿ ತೊಗರಿ ಖರೀದಿ ಕೇಂದ್ರ ತೆರೆದು ರೈತರ ನೆರವಿಗೆ ಧಾವಿಸಬೇಕು. ಈಗ ತೊಗರಿ ಕಟಾವು ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ರಾಜ್ಯ ಸರ್ಕಾರ ಖರೀದಿ ಕೇಂದ್ರ ತೆರೆಯುವುದು ಅತೀ ಅವಶ್ಯವಿದೆ ಎಂದು ಹೇಳಿದ್ದಾರೆ.

ರಾಜ್ಯದ ಕಲಬುರ್ಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ ರೈತರ ಆದಾಯದ ಮೂಲ ತೊಗರಿ ಬೆಳೆಯಾಗಿದೆ. ಕೇಂದ್ರ ಸರ್ಕಾರದ ಅನುಮತಿಯನ್ನು ಸದುಪಯೋಗಪಡಿಸಿಕೊಂಡು, ರಾಜ್ಯ ಸರ್ಕಾರ ಕೂಡಲೇ ಎಲ್ಲ ಕಡೆ ತೊಗರಿ ಖರೀದಿ ಕೇಂದ್ರ ತೆರೆಯಲು ಮುಂದಾಗಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.