ADVERTISEMENT

ಲಾರಿಗಳನ್ನು ತಡೆದು ಚಾಲಕರಿಗೆ ತೊಂದರೆ: ಇಬ್ಬರು ಪೊಲೀಸರ ಅಮಾನತು

​ಪ್ರಜಾವಾಣಿ ವಾರ್ತೆ
Published 21 ಮೇ 2021, 15:49 IST
Last Updated 21 ಮೇ 2021, 15:49 IST

ವಿಜಯಪುರ: ವಿಜಯಪುರ–ಅಥಣಿ ಹೆದ್ದಾರಿಯಲ್ಲಿ ಸಂಚರಿಸುವ ಲಾರಿಗಳನ್ನು ವಿನಾಕಾರಣ ತಡೆದು ನಿಲ್ಲಿಸಿ, ಚಾಲಕರಿಗೆ ತೊಂದರೆ ನೀಡಿ ಅವರಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಮೇರೆಗೆ ಹೈವೇ ಪೆಟ್ರೋಲಿಂಗ್‌ ವಾಹನದಲ್ಲಿ ಕಾರ್ಯ ನಿರ್ವಹಿಸುವ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಮಪ್‌ ಅಗರವಾಲ್‌ ತಿಳಿಸಿದ್ದಾರೆ.

ತಿಕೋಟಾ ಪೊಲೀಸ್‌ ಠಾಣೆಯ ಎಎಸ್‌ಐ ಎಂ.ಎಸ್‌.ವಾಲಿಕಾರ ಹಾಗೂ ವಿಜಯಪುರ ಡಿಎಆರ್‌ ಘಟಕದ ಎ.ಎಸ್‌.ಐ ಯು.ಬಿ.ಚಿಗರೊಳ್ಳಿ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಲಾರಿ ಚಾಲಕರಿಂದ ಹಣ ವಸೂಲಿ ಮಾಡುವ ವಿಡಿಯೊ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಪರಿಶೀಲಿಸಿ, ಇಲಾಖಾ ವಿಚಾರಣೆಯನ್ನು ಬಾಕಿ ಇಟ್ಟು ಕ್ರಮಕೈಗೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.